ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದಿಸುವ ಉತ್ಪನ್ನಗಳಿಗೆ ಸರಿಯಾದ ಬ್ರಾಂಡಿಂಗ್ ಅಗತ್ಯ. ಅದು ಸಾಧ್ಯವಾದರೆ ಮಾರುಕಟ್ಟೆ ತಾನಾಗಿಯೇ ಲಭ್ಯವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ನಗರದ ಭಾರತೀಯ ವಿದ್ಯಾ ಭವನದಲ್ಲಿ ಬುಧವಾರ ನಡೆದ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಹೊಸ ಉತ್ಪನ್ನಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಗುಡಿ ಕೈಗಾರಿಕೆಗಳು ಮತ್ತು ಗೃಹೋಪಯೋಗಿ ವಸ್ತುಗಳ ಸ್ಥಳೀಯ ಉತ್ಪಾದನೆಯ ಮೂಲಕವೇ ದೇಶ ಸಶಕ್ತವಾಗಬೇಕು ಎಂದು ಮಹಾತ್ಮ ಗಾಂಧೀಜಿ ಬಯಸಿದ್ದರು. ಅವರ ಆಶಯಕ್ಕೆ ಪುಇರಕವಾಗಿ ಸಿರಿ ಸಂಸ್ಥೆ ಕೆಲಸ ಮಾಡುತ್ತಿದೆ ಎಂದರು.
ಪಾಶ್ಚಿಮಾತ್ಯ ಕಂಪನಿಗಳು ಮತ್ತು ಕಾರ್ಪೋರೇಟ್ ಕಂಪನಿಗಳ ಉತ್ಪನ್ನಗಳ ಬಳಕೆಯು ಸ್ಥಳೀಯ ಉದ್ಯೋಗಗಳ ನಾಶಕ್ಕೆ ದಾರಿಯಾಗಲಿದೆ. ಈ ಬಗ್ಗೆ ಕೂಡ ಜಾಗೃತಿ ಅಗತ್ಯ ಎಂದು ಹೇಳಿದರು.
ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ, ನಟ ರಮೇಶ್ ಅರವಿಂದ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
ಸಿರಿ ಧಾನ್ಯಗಳು, ಮಸಾಲೆ ಪದಾರ್ಥಗಳು ಸೇರಿದಂತೆ 'ಸಿರಿ ಗ್ರಾಮೋದ್ಯೋಗ ಸಂಸ್ಥೆ'ಯ ಹಲವು ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು.