ಬೆಂಗಳೂರು: ಋಣಮುಕ್ತ ಕಾಯ್ದೆಯಿಂದ ಕಾನೂನು ಬದ್ಧವಾಗಿ ಲೇವಾದೇವಿ ನಡೆಸುವವರಿಗೆ ತೊಂದರೆ ಆಗಿದ್ದು, ಕಾಯ್ದೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಬೇಕು ಎಂದು ಲೇವಾದೇವಿ ಮತ್ತು ಗಿರವಿದಾರರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಗಿರವಿದಾರರ ಸಂಘಟನೆಯ ಪ್ರಮುಖರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕಾಯ್ದೆಯಿಂದ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು.
‘ಋಣಮುಕ್ತ ಕಾಯ್ದೆಯು ಲೇವಾದೇವಿದಾರರಿಗೆ ಮರಣ ಶಾಸನವಾಗಿದೆ. ನಾವು ಕಾನೂನಿಗೆ ಅನುಗುಣವಾಗಿಯೇ ನಡೆದುಕೊಳ್ಳುತ್ತಿದ್ದೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲು ಅಡ್ಡಿ ಇಲ್ಲ’ ಎಂದು ಅವರು ಮುಖ್ಯಮಂತ್ರಿಯವರಿಗೆ ತಿಳಿಸಿದರು.
ಗಿರವಿ ವರ್ತಕರ ನಿಯೋಗವು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಋಣ ಪರಿಹಾರ ಕಾಯ್ದೆ 2018ರ ಅನುಷ್ಠಾನ ಕುರಿತಂತೆ ಚರ್ಚಿಸಿದರು.
— CM of Karnataka (@CMofKarnataka) August 26, 2019
ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಲಾಂಬಿಕಾ ದೇವಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/4axNdEQQss
‘ಕಾನೂನು ಬದ್ಧವಾಗಿ ಲೇವಾದೇವಿ ನಡೆಸುವವರ ಬಳಿ ಸಾಲ ಪಡೆದ ಯಾರೊಬ್ಬರೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕಾನೂನು ಬದ್ಧವಾಗಿ ನಡೆದುಕೊಳ್ಳುವವರಿಗೆ ತೊಂದರೆ ಮಾಡಬಾರದು’ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿರುವುದಾಗಿಗಿರವಿ ವರ್ತಕರ ಸಲಹೆಗಾರ ಮತ್ತು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ರೈತರ ವಿರುದ್ಧದ ಮೊಕದ್ದಮೆ ಹಿಂದಕ್ಕೆ
ರಾಜ್ಯದ ವಿವಿಧ ಭಾಗಗಳಲ್ಲಿ ರೈತರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಕೈಬಿಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ರೈತ ಸಂಘಟನೆಗಳ ಮುಖಂಡರು ಸೋಮವಾರ ಭೇಟಿ ಮಾಡಿ, ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು.
ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರೈತರ ಹೋರಾಟಗಳ ಬಗ್ಗೆ ಮಾಹಿತಿ ಪಡೆದು ಅದರಲ್ಲಿ ದಾಖಲಾದ ಮೊಕದ್ದಮೆಗಳ ಮಾಹಿತಿ ತರಿಸಿಕೊಂಡು ಅದನ್ನು ಹಿಂದಕ್ಕೆ ಪಡೆಯಲು ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದರು.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
— CM of Karnataka (@CMofKarnataka) August 26, 2019
ರೈತ ಮುಖಂಡ ಕುರುಬೂರು ಶಾಂತಕುಮಾರ್, ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತಿತರರು ಉಪಸ್ಥಿತರಿದ್ದರು. pic.twitter.com/fJuSOrCUmg
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.