ಬೆಂಗಳೂರು: ಜ್ಞಾನಭಾರತಿ ಆವರಣದ ಭೂಮಿ ಹಂಚಿಕೆ ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.
ಭೂಮಿ ಹಂಚಿಕೆ ಮತ್ತು ಕಟ್ಟಡ ನಿರ್ಮಾಣ ಕಾರ್ಯದಿಂದ ಸಸ್ಯ ಮತ್ತು ಪ್ರಾಣಿ ಸಂಕುಲ ನಾಶವಾಗಲಿದೆ ಎಂದು ಆರೋಪಿಸಿ ವಕೀಲ ಕೆ.ಬಿ. ವಿಜಯಕುಮಾರ್ ಅರ್ಜಿ ಸಲ್ಲಿಸಿದ್ದರು.
2020ರ ಜೂನ್ 24 ರಂದು 15 ಎಕರೆ ಭೂಮಿಯನ್ನು ಯೋಗ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಮತ್ತು 10 ಎಕರೆ ಭೂಮಿಯನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ನೀಡಿರುವುದನ್ನು ಅವರು ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಫೆ.26ಕ್ಕೆ ಮುಂದೂಡಿತು.