ಬೆಂಗಳೂರು: ಕೈಗಾರಿಕಾ ಉದ್ದೇಶಕ್ಕಾಗಿ ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಪರಿವರ್ತಿಸದೇ ಬಳಕೆ ಮಾಡಿಕೊಳ್ಳಲು ಬಜೆಟ್ನಲ್ಲಿ ಅವಕಾಶ ಕಲ್ಪಿಸಿರುವುದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸ್ವಾಗತಿಸಿದೆ.
ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸಮತೋಲನದಿಂದ ಕೂಡಿದೆ. ಈ ಬಾರಿ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದ್ದರೂ, ಇನ್ನೂ ಕೆಲವು ಸುಧಾರಿತ ಮಾರ್ಗಸೂಚಿಗಳನ್ನು ಈ ಕ್ಷೇತ್ರಕ್ಕೆ ನೀಡಬೇಕಾಗಿತ್ತು’ ಎಂದು ಹೇಳಿದ್ದಾರೆ.
‘ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಾದ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದರೆ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಪ್ರೋತ್ಸಾಹಿಸಿದಂತಾಗುತ್ತಿತ್ತು. ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ತಿಳಿಸಿದ್ದಾರೆ.
‘ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ಈಗಾಗಲೇ ನಿಗದಿಪಡಿಸಿರುವ ಹೆಚ್ಚುವರಿ ಆಸ್ತಿ ತೆರಿಗೆಯಿಂದಾಗಿ ಸಂಕಷ್ಟದಲ್ಲಿವೆ. ಜತೆಗೆ ಮಾರ್ಗಸೂಚಿ ದರಗಳನ್ನು ಹೆಚ್ಚಿಸಿರುವುದರಿಂದ ಮತ್ತಷ್ಟು ಸಂಕಷ್ಟಕ್ಕೀಡಾಗಲಿವೆ. ಪ್ರಸಕ್ತ ವಿದ್ಯುತ್ ದರದಲ್ಲಿ ಆಗಿರುವ ಹೆಚ್ಚಳ ವಿದ್ಯುತ್ ತೆರಿಗೆಯನ್ನು ಶೇ 9 ರಿಂದ ಶೇ 3ಕ್ಕೆ ಇಳಿಸಬೇಕೆನ್ನುವ ಮನವಿಯನ್ನು ಪರಿಗಣಿಸಿಲ್ಲ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.