ಬೆಂಗಳೂರು: ವಿದ್ಯಾರ್ಥಿಗಳು ವಾಸವಿದ್ದ ಪಿಜಿಗಳಿಗೆ ನುಗ್ಗಿ ಲ್ಯಾಪ್ಟಾಪ್ ಕಳವು ಮಾಡುತ್ತಿದ್ದ ಆಂಧ್ರಪ್ರದೇಶದ ಆರೋಪಿಯನ್ನು ಕುಮಾರಸ್ವಾಮಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಮಾರ್(29) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 25 ಲ್ಯಾಪ್ಟಾಪ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಠಾಣಾ ವ್ಯಾಪ್ತಿಯ ದಯಾನಂದ ಸಾಗರ್ ಕಾಲೇಜು ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿ ಲ್ಯಾಪ್ಟಾಪ್ ಕಳವು ಮಾಡಿದ್ದ. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯ ಬಂಧನದಿಂದ ನಗರದ ವಿವಿಧ ಐದು ಠಾಣೆಗಳಲ್ಲಿ ದಾಖಲಾಗಿದ್ದ 17 ಲ್ಯಾಪ್ಟಾಪ್ ಕಳವು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, ಈತನ ವಿರುದ್ಧ 2021ರಲ್ಲಿ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಚೆನ್ನೈನಲ್ಲಿ ಮಾರಾಟ:
ಆರೋಪಿಯ ವಿಚಾರಣೆ ವೇಳೆ ಬೆಂಗಳೂರಿನಲ್ಲಿ ಕಳವು ಮಾಡಿದ ಲ್ಯಾಪ್ಟಾಪ್ಗಳನ್ನು ಚೆನ್ನೈನ ಶಂಕರ್ಪುರದಲ್ಲಿರುವ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದ. ಆತನ ವಶದಿಂದ 25 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.