ಬೆಂಗಳೂರು: ‘ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಅಡಿಯಲ್ಲಿ ಬೆಂಗಳೂರಿನಲ್ಲಿ ಆಯ್ದ 42 ತಾಣಗಳನ್ನು ಅಭಿವೃದ್ಧಿ ಮಾಡಲು ನೀಲನಕ್ಷೆಯನ್ನು ತಯಾರಿಸಲಾಗಿದ್ದು, ಅದರಂತೆ ಕೂಡಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಜಲಮಂಡಳಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಮಾಡಲಾಗುವುದು’ ಎಂದರು.
ಜಲಮಂಡಳಿಯ ಮಾಜಿ ಅಧ್ಯಕ್ಷ ಎಚ್.ಎಸ್. ಪುಟ್ಟಕೆಂಪಣ್ಣ, ‘ಜಲಮಂಡಳಿಗೆ 3,500 ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ. ಆದರೂ, ಮಂಡಳಿಯಲ್ಲಿ ಕೇವಲ 1,800 ಸಿಬ್ಬಂದಿ ಇದ್ದಾರೆ. ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಸರ್ಕಾರ ಮುಂದಾಗಬೇಕು’ ಎಂದು ಮನವಿ ಮಾಡಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ‘ನಗರದಲ್ಲಿ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡುವ ಅಗತ್ಯವಿದೆ’ ಎಂದರು.