ಬೆಂಗಳೂರು: ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಕ್ಷೇತ್ರಗಳನ್ನು ಗೆಲ್ಲಲಿದ್ದು, ಚುನಾವಣೆ ಸಿದ್ಧತೆಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸದ್ಯವೇ ಸಭೆ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು.
ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.
ಉಪ ಚುನಾವಣೆಯಲ್ಲಿ 17ಕ್ಷೇತ್ರಗಳನ್ನೂ ಗೆಲ್ಲುವ ಬಗ್ಗೆ ಕಾರ್ಯತಂತ್ರ ರೂಪಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯಿತು ಎಂದರು.
58 ಸಾವಿರ ಬೂತ್ ಅಧ್ಯಕ್ಷರ ನೇಮಕ: ಇದೇ 30 ರೊಳಗೆ 58 ಸಾವಿರ ಬೂತ್ಗಳಿಗೆ ಅಧ್ಯಕ್ಷರು ಮತ್ತು 300 ಮಂಡಲಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. ಆ ಬಳಿಕ ಎಲ್ಲ ಜಿಲ್ಲಾ ಅಧ್ಯಕ್ಷರು ಮತ್ತು ರಾಜ್ಯ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂದರು.
ಅಪ್ಪನ ತಪ್ಪಿಗೆ ಮಗಳಿಗೆ ತೊಂದರೆ: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮಾಡಿದ ತಪ್ಪಿಗೆ ಅವರ ಪುತ್ರಿ ಐಶ್ವರ್ಯ ಇ.ಡಿ ವಿಚಾರಣೆ ಎದುರಿಸುವಂತಾಗಿದ್ದು ಬೇಸರದ ಸಂಗತಿ ಎಂದರು.
ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಇತರ ಪದಾಧಿಕಾರಿಗಳು ಇದ್ದರು.