ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ: ಸಚಿವ ಬೈರತಿ ಬಸವರಾಜ ಸೂಚನೆ

Last Updated 16 ಆಗಸ್ಟ್ 2021, 11:22 IST
ಅಕ್ಷರ ಗಾತ್ರ

ಬೆಂಗಳೂರು: ‘ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಮಹಾನಗರ ಪಾಲಿಕೆಗಳ ಆಯುಕ್ತರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಮತ್ತೆ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯನ್ನು ಸೋಮವಾರ ಅವರು ನಡೆಸಿದರು.

‘ಎಲ್ಲ ಮಹಾನಗರಪಾಲಿಕೆಗಳ ಆಯುಕ್ತರು ಪ್ರತಿ ದಿನ ಒಂದು ಗಂಟೆ ತಮ್ಮ ನಗರದಲ್ಲಿ ಸಂಚರಿಸುವ ಮೂಲಕ ಸ್ವಚ್ಚತಾ ಕಾರ್ಯಗಳ ಪರಿಶೀಲನೆ ನಡೆಸಬೇಕು. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಂಡು, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದರು.

‘ಬೀದಿದೀಪಗಳ ದುರಸ್ತಿ ಮತ್ತು ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಬೇಕು. ಹಲವು ಹೊಸ ಬಡಾವಣೆ, ಪ್ರದೇಶಗಳಲ್ಲಿ ಬೀದಿದೀಪಗಳು ಇಲ್ಲ ಎಂಬ ದೂರುಗಳು ಬಂದಿವೆ. ಅದನ್ನು ನಿವಾರಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಸ್ವತ್ತುಗಳ ಅಸ್ತಿ ತೆರಿಗೆ ಸರಿಯಾಗಿ ಸಂದಾಯ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡುವ ಮೂಲಕ ವಸೂಲಿಗೆ ಮುಂದಾಗಬೇಕು. ಯಾವುದೇ ರೀತಿಯ ಒತ್ತಡಕ್ಕೆ ಮಣಿಯಬಾರದು’ ಎಂದೂ ಅಧಿಕಾರಿಗಳಿಗೆ ಸೂಚಿಸಿದರು.

‘ಸಾರ್ವಜನಿಕರಿಂದ ಬರುವ ದೂರುಗಳು, ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಬೇಕು. ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಯುಕ್ತರು ಪರಿಹರಿಸಬೇಕು. ಆ ಮೂಲಕ, ದೂರುಗಳು ವಿಧಾನಸೌಧದ ಸಚಿವರ ಕಚೇರಿಯವರೆಗೆ ಬರದಂತೆ ನೋಡಿಕೊಳ್ಳಬೇಕು. ಅಧಿಕಾರಿ ವರ್ಗದವರು ಸಾರ್ವಜನಿಕರಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಬೇಕು. ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು’ ಎಂದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷ್‌, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ. ರೇಜು, ದಾವಣಗೆರೆ, ಶಿವಮೊಗ್ಗ, ‌ಮಂಗಳೂರು, ತುಮಕೂರು, ಬಳ್ಳಾರಿ, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಇಲಾಖೆಯ ಹಿರಿಯ ಅಧಿಕಾರಿ ವರ್ಗದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT