ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಬೆಂಬಲಿಸಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಗುರುವಾರ ತಿರಂಗ ಯಾತ್ರಾ ರ್ಯಾಲಿ ನಡೆಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಮಲ್ಲೇಶ್ವರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ರ್ಯಾಲಿಯುದ್ದಕ್ಕೂ 80 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ವಿದ್ಯಾರ್ಥಿಗಳು ಹಿಡಿದುಕೊಂಡಿದ್ದರು. ‘ವಿದ್ಯಾರ್ಥಿಗಳ ಶಕ್ತಿ, ರಾಷ್ಟ್ರದ ಶಕ್ತಿ’ ಹಾಗೂ ‘ಸಿಎಎ ಹಾಗೂ ಎನ್ಆರ್ಸಿಗೆ ನಮ್ಮ ಬೆಂಬಲ’ ಎಂಬ ಘೋಷಣೆ ಕೂಗಿದರು.
ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷಾ ನಾರಾಯಣ್, ‘ಕಾಯ್ದೆ ಬಗ್ಗೆ ನಿಜಾಂಶ ತಿಳಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಈ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರು ಸ್ವಯಂ ಪ್ರೇರಣೆಯಿಂದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ’ ಎಂದರು.
ವಿದ್ಯಾರ್ಥಿನಿಯರೇ ಹೆಚ್ಚು: ಸರ್ಕಾರಿ ಬಾಲಕಿಯರ ಪಿಯು ಕಾಲೇಜು, 18ನೇ ಕ್ರಾಸ್ನ ಬಾಲಕಿಯರ ಪಿಯು ಕಾಲೇಜು ಹಾಗೂ ಮಹಾರಾಣಿ ಲಕ್ಷ್ಮಿ ಅಮ್ಮಣಿ ಕಾಲೇಜಿನ ವಿದ್ಯಾರ್ಥಿನಿಯರೇ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.