ಬೆಂಗಳೂರು: ‘ಕೆನರಾ ಬ್ಯಾಂಕ್ ತನ್ನ ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಮೂಲಕ ಉತ್ತಮ ಶಿಕ್ಷಣ ನೀಡಿ, ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ನಿರುದ್ಯೋಗಿಗಳಿಗೆ ಆಶಾಕಿರಣವಾಗಿದೆ’ ಎಂದು ನಟ ರಾಮಕೃಷ್ಣ ಅಭಿಪ್ರಾಯಪಟ್ಟರು.
ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ನಗರದಲ್ಲಿ ಆಯೋಜಿಸಿದ್ದ ಕಂಪ್ಯೂಟರ್ ಶಿಕ್ಷಣ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
‘ನಿರುದ್ಯೋಗಿ ಯುವಕ, ಯುವತಿಯರು ಬ್ಯಾಂಕ್ ವತಿಯಿಂದ ನೀಡಲಾಗುವ ತರಬೇತಿಗಳ ಪೂರ್ಣ ಪ್ರಯೋಜನ ಪಡೆದುಕೊಂಡು, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.
ಕೆನರಾ ಬ್ಯಾಂಕ್ ಶತಮಾನೋತ್ಸವ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಣ್ಣಮ್ಮ ಸೈಮನ್, ‘ಕೆನರಾ ಬ್ಯಾಂಕ್ ಈ ತರಬೇತಿ ಮೂಲಕ ಲಕ್ಷಾಂತರ ನಿರುದ್ಯೋಗಿಗಳಿಗೆ ವೃತ್ತಿ ತರಬೇತಿಯನ್ನು ನೀಡುತ್ತಾ ಬಂದಿದ್ದು, ಇವರಲ್ಲಿ ಶೇ 74ರಷ್ಟು ಜನರಿಗೆ ಉತ್ತಮ ಉದ್ಯೋಗ ಸಿಕ್ಕಿದೆ’ ಎಂದರು.
ತರಬೇತಿ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಸಂಸ್ಥೆಯ ನಿರ್ದೇಶಕ ವೆಂಕಟೇಶ ಶೇಷಾದ್ರಿ, ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕ ಜಗದೀಶ್ ಮೂರ್ತಿ, ವೆಂಕಟೇಶ ಬಾಬು, ಕೆ.ಅನುಶ್ರೀ ಇದ್ದರು.