ಬೆಂಗಳೂರು: ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಮಾರುತ್ತಿದ್ದ ಕೇರಳದ ಇಬ್ಬರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದು, 16 ಕೆ.ಜಿ. ಗಾಂಜಾ, 1 ಲೀಟರ್ ವೀಡ್ ಆಯಿಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಬೊಮ್ಮನಹಳ್ಳಿಯಲ್ಲಿ ವಾಸವಿದ್ದ ಮೊಹಮ್ಮದ್ ಶಾಕೀರ್ (34) ಹಾಗೂ ತಾವರೆಕೆರೆಯ ಕೃಷ್ಣ ಕುಮಾರ್ (36) ಬಂಧಿತರು. ಸಿ.ವಿ.ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಬಳಿ ಮಾದಕ ವಸ್ತುಗಳನ್ನು ಮಾರಲು ಪ್ರಯತ್ನ ಮಾಡುತ್ತಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ವಿಜಯವಾಡದಿಂದ ಮಾದಕ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಉದ್ಯಮಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
18 ಕೆ.ಜಿ.ಗಾಂಜಾ ವಶ: ಎಸ್.ಜಿ.ಪಾಳ್ಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದು, ₹ 5 ಲಕ್ಷ ಮೌಲ್ಯದ 18 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.