ಬೆಂಗಳೂರು: ಸೇಪ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
ವಕೀಲರಾದ ಗೀತಾ ಮಿಶ್ರಾ ಅರ್ಜಿ ಸಲ್ಲಿಸಿದ್ದು, ‘ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಐಎಂಎ ಪ್ರಕರಣದಲ್ಲಿ ಸಿಬಿಐನಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಅವರೇ ಟೆಂಡರ್ ಆಹ್ವಾನ ಸಮಿತಿ ಮುಖ್ಯಸ್ಥರಾಗಿದ್ದಾರೆ’ ಎಂದು ದೂರಿದ್ದರು.
‘ನಿಂಬಾಳ್ಕರ್ ಅವರನ್ನು ಈ ಸಮಿತಿಯಿಂದ ವರ್ಗಾಯಿಸಿ ಸೌಮೇಂದು ಮುಖರ್ಜಿ ಅವರನ್ನು ನೇಮಿಸಲಾಗಿದೆ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಸ್ಪಷ್ಟಪಡಿಸಿದರು.
‘ಟೆಂಡರ್ ವಿಷಯದಲ್ಲಿ ಎಫ್ಐಆರ್ ದಾಖಲಾಗದ ಕಾರಣ ಸಿಬಿಐಗೆ ವರ್ಗಾವಣೆ ಮಾಡಲು ಆಗುವುದಿಲ್ಲ’ ಎಂದು ತಿಳಿಸಿದ ಪೀಠ, ಅರ್ಜಿ ವಿಲೇವಾರಿ ಮಾಡಿತು.