ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮೇಯರ್ಸಂಪತ್ ರಾಜ್ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ.
ಈ ಹಿಂದೆಯೂ ಸಂಪತ್ ರಾಜ್ ಅವರು ಸಿಸಿಬಿ ವಿಚಾರಣೆ ಎದುರಿಸಿದ್ದರು. ಕೆಲ ಮಾಹಿತಿ ಕಲೆಹಾಕಿದ್ದ ಪೊಲೀಸರು, ಪುನಃ ವಿಚಾರಣೆಗೆ ಕರೆಸುವುದಾಗಿ ಹೇಳಿದ್ದರು. ಇದೀಗ ಎರಡನೇ ಬಾರಿ ನೋಟಿಸ್ ನೀಡಿದ್ದು, ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್ಕುಮಾರ್ನನ್ನು ಈಗಾಗಲೇ ಬಂಧಿಸಲಾಗಿದೆ. ಆತನ ಹೇಳಿಕೆ ಆಧರಿಸಿ ಸಂಪತ್ ರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ಗೊತ್ತಾಗಿದೆ.
‘ಶುಕ್ರವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸಂಪತ್ ರಾಜ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿಯ ಹಿರಿಯ ಅಧಿಕಾರಿಗಳು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.