ಬೆಂಗಳೂರು: ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು ಮಾಡಿದ್ದ ಎರಡು ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ₹ 40 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ.
‘ಜೀವನ್ಭಿಮಾನಗರ ಠಾಣೆ ವ್ಯಾಪ್ತಿಯ ನ್ಯೂ ತಿಪ್ಪಸಂದ್ರ ಮುಖ್ಯರಸ್ತೆ ಹಾಗೂ ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಸ್ಥಳವೊಂದರಲ್ಲಿದ್ದ ಗೋದಾಮುಗಳ ಮೇಲೆ ಪ್ರತ್ಯೇಕವಾಗಿ ದಾಳಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಪಟಾಕಿ ಮಾರಾಟ ಹಾಗೂ ದಾಸ್ತಾನು ಮಾಡಲು ಸಂಬಂಧಪಟ್ಟ ಪ್ರಾಧಿಕಾರಗಳ ಅನುಮತಿ ಕಡ್ಡಾಯ. ಆದರೆ, ದೀಪಾವಳಿ ಹಬ್ಬಕ್ಕಾಗಿ ಕೆಲವರು ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಲಾಯಿತು’ ಎಂದು ತಿಳಿಸಿದರು.
‘ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯಲ್ಲಿ ಹಲವು ದಿನಗಳಿಂದ ಪಟಾಕಿ ಸಂಗ್ರಹಿಸಲಾಗಿತ್ತು. ಅದೇ ಗೋದಾಮಿನಲ್ಲಿ ₹25 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಗೋದಾಮಿನಲ್ಲಿ ₹15 ಲಕ್ಷ ಮೌಲ್ಯದ ಪಟಾಕಿ ಸಿಕ್ಕಿದೆ’ ಎಂದರು.
‘ಎರಡೂ ಗೋದಾಮು ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.