ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಡಿಕೇಟ್ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಬಂಧನ

* ಕೃಷಿ ಮಾರಾಟ ಮಂಡಳಿಗೆ ₹ 48 ಕೋಟಿ ವಂಚನೆ ಪ್ರಕರಣ * ಚೆನ್ನೈಗೆ ಸಿಸಿಬಿ ತಂಡ
Last Updated 7 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಕೃಷಿ ಮಾರಾಟ ಮಂಡಳಿಯ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿರುವ ಆರೋಪದಡಿ ಸಿಂಡಿಕೇಟ್ ಬ್ಯಾಂಕ್‌ನ ಉತ್ತರಹಳ್ಳಿ ಶಾಖೆಯ ಸಹಾಯಕ ವ್ಯವಸ್ಥಾಪಕ ಜಯರಾಮ್ ಹಾಗೂ ಮಂಡಳಿಯ ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ (ಡಿಜಿಎಂ) ಸಿದ್ದಗಂಗಯ್ಯ ಸೇರಿ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಂಡಳಿಯ ₹48 ಕೋಟಿಯನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ನಂಬಿಕೆದ್ರೋಹ ಎಸಗಲಾಗಿದೆ’ ಎಂದು ಆರೋಪಿಸಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕರಿಗೌಡ ಇತ್ತೀಚೆಗೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಗಂಭೀರತೆ ಅರಿತ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತನಿಖೆ ಹೊಣೆಯನ್ನು ಸಿಸಿಬಿಗೆ ವಹಿಸಿದ್ದರು. ಚುರುಕಿನ ತನಿಖೆ ಕೈಗೊಂಡಿರುವ ಪೊಲೀಸರು, ಇದುವರೆಗೂ ಆರು ಮಂದಿಯನ್ನು ಬಂಧಿಸಿದ್ದಾರೆ. ಮಂಡಳಿಯ ಕೆಲ ನೌಕರರು ಕೃತ್ಯದಲ್ಲಿ ಶಾಮೀಲಾಗಿರುವ ಅನುಮಾನವಿದ್ದು, ಅವರೆಲ್ಲ ತಲೆಮರೆಸಿಕೊಂಡಿದ್ದಾರೆ.

‘ಜಯರಾಮ್ ಹಾಗೂ ಸಿದ್ದಗಂಗಯ್ಯ ಒಳಸಂಚು ನಡೆಸಿ ಕೃತ್ಯ ಎಸಗಿದ್ದು ಇದುವರೆಗಿನ ತನಿಖೆಯಿಂದ ಗೊತ್ತಾಗಿದ್ದು, ಅವರನ್ನು ಬಂಧಿಸಿ ಹೇಳಿಕೆ ಪಡೆಯಲಾಗಿದೆ. ಕೃತ್ಯಕ್ಕೆ ಸಹಕರಿಸಿದ್ದಭರತ್, ಮುಸ್ತಫಾ, ಮಹಮ್ಮದ್ ಅಸ್ಲಾಂ ಹಾಗೂ ರೇವಣ್ಣ ಎಂಬುವರನ್ನು ಸೆರೆಹಿಡಿಯಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ಚೆನ್ನೈನಲ್ಲಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ; ‘ಚೆನ್ನೈನಲ್ಲಿರುವ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವುದಕ್ಕೆ ಪುರಾವೆಗಳು ಸಿಕ್ಕಿವೆ. ಖಾತೆ ಹೊಂದಿರುವ ವ್ಯಕ್ತಿಗಳನ್ನು ಹಾಗೂ ಬ್ಯಾಂಕ್ ಅಧಿಕಾರಿಗಳನ್ನು ವಿಚಾರಣೆ ಒಳಪಡಿಸಬೇಕಿದೆ. ಸಿಸಿಬಿ ತಂಡ ಚೆನ್ನೈಗೆ ಹೋಗಿದೆ’ ಎಂದು ಮೂಲಗಳು ತಿಳಿಸಿವೆ.

‘ರಾಜ್ಯ ಕೃಷಿ ಮಾರಾಟ ಮಂಡಳಿ ಆವರ್ತನಿಧಿ ಇರುವ ಆಂಧ್ರ ಬ್ಯಾಂಕ್‌ನ ರಾಜಾಜಿನಗರ ಶಾಖೆಯಿಂದ ಆರ್‌ಟಿಜಿಎಸ್ ಮೂಲಕ ₹ 100 ಕೋಟಿ ಹಣವನ್ನು ಸಿಂಡಿಕೇಟ್ ಬ್ಯಾಂಕ್‌ ಉತ್ತರಹಳ್ಳಿ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ತಲಾ ₹ 50 ಕೋಟಿಯಂತೆ ಎರಡು ನಿಶ್ಚಿತ ಠೇವಣಿಗಳನ್ನು ಇಡಲಾಗಿತ್ತು. ಒಂದು ಠೇವಣಿಯ ಹಣವನ್ನೇ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಆರೋಪಿಗಳು ವಂಚಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT