ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.8ಕ್ಕೆ 20ನೇ ಚಿತ್ರಸಂತೆ, 4 ಲಕ್ಷ ಮಂದಿ ನಿರೀಕ್ಷೆ

ಭೌತಿಕ, ಆನ್‌ಲೈನ್ ರೂಪದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜನೆ
Last Updated 24 ನವೆಂಬರ್ 2022, 19:40 IST
ಅಕ್ಷರ ಗಾತ್ರ

ಬೆಂಗಳೂರು:ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ಅವಕಾಶ ಒದಗಿಸುವ ‘ಚಿತ್ರಸಂತೆ’ಯನ್ನು ಕರ್ನಾಟಕ ಚಿತ್ರಕಲಾ ಪರಿಷತ್ತು 2023ರ ಜ.8ರಂದು ಕುಮಾರಕೃಪಾ ರಸ್ತೆಯಲ್ಲಿ ಹಮ್ಮಿಕೊಂಡಿದೆ.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ‘20ನೇ ಚಿತ್ರಸಂತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಪರಿಷತ್ತಿನ ಕಲಾ ಗ್ಯಾಲರಿಗಳಲ್ಲಿ ಮೈಸೂರು ಸಾಂಪ್ರದಾಯಿಕ ಶೈಲಿಯ ಕಲಾಕೃತಿಗಳು, ತೊಗಲು ಬೊಂಬೆ ಕಲಾಕೃತಿಗಳು ಹಾಗೂ ಪ್ರಶಸ್ತಿಗೆ ಭಾಜನರಾದ ಕಲಾವಿದರ ಕಲಾಕೃತಿಗಳು ಪ್ರದರ್ಶನ ಕಾಣಲಿವೆ. ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಿತ್ರಸಂತೆ ನಡೆಯುವ ಸ್ಥಳದಲ್ಲಿ ದಿನವಿಡೀ ಕಲಾ ಪ್ರದರ್ಶನ ನೀಡಲಿದ್ದಾರೆ’ ಎಂದು ತಿಳಿಸಿದರು.

‘ಚಿತ್ರಸಂತೆಗೆ 4 ಲಕ್ಷ ಜನ ಭೇಟಿ ನೀಡುವ ನಿರೀಕ್ಷೆ ಇದೆ. ಮೈಸೂರು ಸಾಂಪ್ರದಾಯಿಕ, ರಾಜಸ್ಥಾನಿ, ಮಧುಬನಿ ಸೇರಿ ವಿವಿಧ ಶೈಲಿಯ ಕಲಾಕೃತಿಗಳು ಪ್ರದರ್ಶನ ಕಾಣಲಿವೆ. 19ನೇ ಚಿತ್ರಸಂತೆಯಲ್ಲಿ ₹ 3 ಕೋಟಿಗೂ ಅಧಿಕ ಮೊತ್ತದ ಕಲಾಕೃತಿಗಳು ಮಾರಾಟವಾಗಿದ್ದವು. ಉದಯೋನ್ಮುಖ ಕಲಾವಿದರಿಗೆ ಚಿತ್ರಸಂತೆ ತೆರೆದ ಶಾಲೆ ಎಂದು ಪ್ರಸಿದ್ಧಿ ಪಡೆದಿದೆ. 20ನೇ ಚಿತ್ರ ಸಂತೆಯಲ್ಲಿ ವಿವಿಧ ರಾಜ್ಯಗಳ ವೃತ್ತಿನಿರತ ಹಾಗೂ ಹವ್ಯಾಸಿ ಕಲಾವಿದರು ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

ನೇರ ಖರೀದಿಗೆ ಅವಕಾಶ:‘ಹಿರಿಯ ಕಲಾವಿದರು ಹಾಗೂ ಅಂಗವಿಕಲರಿಗೆ ಪರಿಷತ್ತಿನ ಆವರಣದಲ್ಲಿಯೇ ಕಲಾಕೃತಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆವರಣದ ಒಳಗಡೆ ವಿವಿಧ ಬ್ಯಾಂಕ್‌ಗಳ ಎಟಿಎಂ ಯಂತ್ರಗಳು ಹಾಗೂ ಹೊರಗಡೆ ಸಂಚಾರಿ ಎಟಿಎಂ ಇರಲಿದೆ. ಈ ಚಿತ್ರಸಂತೆಯಲ್ಲಿ ₹ 100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಇರಲಿವೆ. ಕಲಾವಿದರಿಂದ ನೇರವಾಗಿ ಕಲಾಕೃತಿಗಳನ್ನು ಖರೀದಿಸಬಹುದು’ ಎಂದು ಬಿ.ಎಲ್. ಶಂಕರ್ ವಿವರಿಸಿದರು.

‘ಚಿತ್ರಸಂತೆಯಲ್ಲಿ ಸಾಮಾನ್ಯವಾಗಿ ಮೈಸೂರು ಸಾಂಪ್ರದಾಯಿಕ ಶೈಲಿ, ರಾಜಸ್ಥಾನಿ ಶೈಲಿ, ಮಧುಬನಿಯ ಶೈಲಿ, ತೈಲ ಮತ್ತು ಜಲ ವರ್ಣದ ಕಲಾಕೃತಿಗಳು ಲಭ್ಯವಿರುತ್ತವೆ. ಇವಲ್ಲದೆ, ಅಕ್ರಲಿಕ್, ಕೊಲಾಜ್, ಲಿಥೋಗ್ರಾಫ್ ಮೊದಲಾದ ಪ್ರಕಾರಗಳ ಕಲಾಕೃತಿಗಳು ದೊರೆಯುತ್ತವೆ. ವ್ಯಂಗ್ಯಚಿತ್ರಗಳ ಪ್ರದರ್ಶನಕ್ಕೂ ಅವಕಾಶ ಇರುತ್ತದೆ. ಕುಂಚ ಹಾಗೂ ಪೆನ್ಸಿಲ್‌ಗಳಿಂದ ಕಲಾರಸಿಕರ ಭಾವಚಿತ್ರಗಳನ್ನು ಸ್ಥಳದಲ್ಲೇ ರಚಿಸಿ ಕೊಡುವ ಕಲಾವಿದರು ಇರುತ್ತಾರೆ’ ಎಂದು ಹೇಳಿದರು.

1,500 ಕಲಾವಿದರು ಭಾಗಿ

‘ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ. ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿ ವಿವಿಧ ರಾಜ್ಯಗಳ ಕಲಾವಿದರುಪಾಲ್ಗೊಳ್ಳುತ್ತಿದ್ದಾರೆ’ ಎಂದು ಬಿ.ಎಲ್. ಶಂಕರ್ ಹೇಳಿದರು.

‘ಚಿತ್ರಸಂತೆಯಲ್ಲಿ ಕಲಾಕೃತಿ ಪ್ರದರ್ಶಿಸುವ ಕಲಾವಿದರ ಆನ್‌ಲೈನ್ ನೋಂದಣಿ ಆರಂಭವಾಗಿದೆ. ಸ್ಥಳೀಯ ಕಲಾವಿದರಿಗೆ ₹ 500 ಹಾಗೂ ಹೊರರಾಜ್ಯಗಳ ಕಲಾವಿದರಿಗೆ ₹ 1 ಸಾವಿರನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ಡಿ.10ರವರೆಗೆ ಕಲಾವಿದರು ಅರ್ಜಿ ಸಲ್ಲಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT