ಬೆಂಗಳೂರು: ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿರುವ ಸ್ನೇಹಿತನ ಫ್ಲ್ಯಾಟ್ನಲ್ಲಿ ನಿಗೂಢವಾಗಿ ಸಾವಿಗೀಡಾಗಿರುವ ಸಿಐಡಿ ಡಿವೈಎಸ್ಪಿ ಎಂ. ಲಕ್ಷ್ಮಿ ಅವರ ಮೊಬೈಲ್ ನಾಪತ್ತೆಯಾಗಿದ್ದು, ಅದಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
‘ನೇಣು ಬಿಗಿದ ಸ್ಥಿತಿಯಲ್ಲಿ ಲಕ್ಷ್ಮಿ ಅವರ ಮೃತದೇಹ ಸಿಕ್ಕ ಸ್ಥಳದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ, ಮೊಬೈಲ್ ಸಿಕ್ಕಿಲ್ಲ. ಅದು ಎಲ್ಲಿದೆ? ಯಾರಾದರೂ ಬಚ್ಚಿಟ್ಟಿದ್ದಾರಾ? ಎಂಬ ಅನುಮಾನವಿದೆ. ಮೊಬೈಲ್ ಕರೆಗಳ ವಿವರ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಗೊಂದಲದ ಹೇಳಿಕೆ: ‘ಲಕ್ಷ್ಮಿ ಅವರ ಸಾವಿನ ಸಂಬಂಧ, ಸ್ನೇಹಿತ ಮನೋಹರ್ ಅಲಿಯಾಸ್ ಮನು, ಆತನ ಸ್ನೇಹಿತರಾದ ರಾಹುಲ್, ಪ್ರಜ್ವಲ್, ರಂಜಿತ್ ಹಾಗೂ ಧರ್ಮೇಗೌಡ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರೆಲ್ಲರೂ ಹೇಳಿಕೆ ನೀಡಿದ್ದು, ಅದರಲ್ಲಿ ಸಾಕಷ್ಟು ಗೊಂದಲಗಳು ಇವೆ’ ಎಂದೂ ಅಧಿಕಾರಿ ತಿಳಿಸಿದರು.
‘ಮೃತದೇಹದ ಮರಣೋತ್ತರ ಪರೀಕ್ಷೆ ವರದಿ ಬರಬೇಕಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯೂ ಕೈ ಸೇರಲಿದೆ. ಅವುಗಳ ಪರಿಶೀಲನೆ ನಡೆಸಿದ ಬಳಿಕವೇ ಲಕ್ಷ್ಮಿ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ನಿಖರವಾಗಿ ತಿಳಿಯಲಿದೆ’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.