ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಯುವತಿಯನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಹೇಳಿ ವಂಚಿಸಿರುವ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘27 ವರ್ಷದ ಯುವತಿ ದೂರು ನೀಡಿದ್ದಾರೆ. ಅತ್ತಿಬೆಲೆಯ ಶಾನಭೋಗನಹಳ್ಳಿ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ರಾಯಚೂರಿನ ಯುವತಿ, ತಂದೆ– ತಾಯಿ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. 2019ರಲ್ಲಿ ಯುವತಿಗೆ ಸಂತೋಷ್ ಪರಿಚಯವಾಗಿತ್ತು. ಸಿನಿಮಾ ನಟನೆಂದು ಆರೋಪಿ ಹೇಳಿಕೊಂಡಿದ್ದ. ಕನ್ನಡ ಹಾಗೂ ತಮಿಳು ಸಿನಿಮಾದಲ್ಲಿ ನಟಿಯಾಗಿ ಅಭಿನಯಿಸಲು ಅವಕಾಶ ಕೊಡಿಸುವುದಾಗಿ ಯುವತಿಗೆ ತಿಳಿಸಿದ್ದ. ಅದನ್ನು ನಂಬಿದ್ದ ಯುವತಿ, ಆರೋಪಿಗೆ ತಮ್ಮ ಮೊಬೈಲ್ ನಂಬರ್ ನೀಡಿದ್ದರು.’
‘ಯುವತಿಗೆ ಕರೆ ಮಾಡಲಾರಂಭಿಸಿದ್ದ ಸಂತೋಷ್, ಮದುವೆಯಾಗುವುದಾಗಿ ಹೇಳಿ ಸಲುಗೆ ಬೆಳೆಸಿದ್ದ. ಯುವತಿ ಹಾಗೂ ಆರೋಪಿ, ಹಲವೆಡೆ ಸುತ್ತಾಡಿದ್ದರು. ಇದೇ ಸಂದರ್ಭದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ’ ಎಂದು ಪೊಲೀಸರು ತಿಳಿಸಿದರು.