ಬೆಂಗಳೂರು: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ರಾಜ್ಯ ಸಮಿತಿ ಹಾಗೂ ಬೆಂಗಳೂರು ವಿಮಾ ನೌಕರರ ಸಂಘದ ಸಹಯೋಗದಲ್ಲಿ ಅಸಂಘಟಿತ ಕಾರ್ಮಿಕರಿಗೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ ಆಹಾರದ ಕಿಟ್ ವಿತರಿಸಲಾಯಿತು.
ಮಾರುಕಟ್ಟೆ ಪ್ರಾಂಗಣದಲ್ಲಿ ನಿತ್ಯ ದುಡಿಯುತ್ತಿರುವ ಮಹಿಳೆಯರು ಹಾಗೂ ಪುರುಷ ಹಮಾಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಚಾಲನೆ ನೀಡಿದರು.
ಬೀದಿಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಆಟೊ ಚಾಲಕರು ಹಾಗೂ ದಿನಗೂಲಿ ಕಾರ್ಮಿಕರಿಗೂ ಸಂಘಟನೆ ವತಿಯಿಂದ ಆಹಾರದ ಕಿಟ್ ವಿತರಿಸಲಾಗುತ್ತಿದೆ.
ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಚ್.ಎನ್.ಗೋಪಾಲಗೌಡ, ಕಾರ್ಯದರ್ಶಿಗಳಾದ ಕೆ.ಎನ್.ಉಮೇಶ್ ಹಾಗೂ ಕೆ.ಮಹಾಂತೇಶ ಭಾಗವಹಿಸಿದ್ದರು.