ಬೆಂಗಳೂರು: ರಾಜ್ಯದ ಯಾವುದೇ ದೇವಾಲಯ ಅಥವಾ ಪ್ರಾರ್ಥನಾಲಯಗಳಲ್ಲಿ ಗುಂಪು ಸೇರುವಂತಿಲ್ಲ. ಬೆಂಗಳೂರು ಕರಗ ನಡೆಸಲೂ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ಕುರಿತು ಖಾಸಗಿ ಆಸ್ಪತ್ರೆ ಆಡಳಿತಾಧಿಕಾರಿಗಳು ಮತ್ತು ವೈದ್ಯರೊಂದಿಗೆ ಸೋಮವಾರ ಸಭೆ ನಡೆಸಿದ ಅವರು,ಮಾರ್ಚ್ 31ರವರೆಗೆ ಮೊನ್ನೆ ತಿಳಿಸಿದ 9 ಜಿಲ್ಲೆಗಳಲ್ಲಿ ಸೆಕ್ಷನ್ 144 ಮುಂದುವರೆಸಲಾಗುವುದು. ಅತ್ಯವಶ್ಯಕ ಸೇವೆಗಳನ್ನು ಹೊರತು ಪಡಿಸಿ ಇತರ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು.
ಮುಖ್ಯಮಂತ್ರಿ ಶ್ರೀ @BSYBJP ಅವರು, #ಕೋವಿಡ್_19 ನಿಯಂತ್ರಣ ಕುರಿತಂತೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ತಜ್ಞ ವೈದ್ಯರೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು.#Covid_19 #CoronaInKarnataka #FightbackIndia pic.twitter.com/LR3hUGIGvF
— CM of Karnataka (@CMofKarnataka) March 23, 2020
ಜೀವನೋಪಾಯಕ್ಕೆ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕಉಚಿತ ಆಹಾರ ಒದಗಿಸಲಾಗುವುದು ಎಂದು ಹೇಳಿದರು.
ಕೋವಿಡ್ 19 ಅನ್ನು ತಡೆಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸುವಂತೆ ಖಾಸಗಿ ಆಸ್ಪತ್ರೆಗಳು, ತಜ್ಞ ವೈದ್ಯರು ಹಾಗೂ ಪರಿಣತರಿಗೆ ಮನವಿ ಮಾಡಿದ್ದೇನೆ. ತಜ್ಞರು ನೀಡುತ್ತಿರುವ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸಭೆಯಲ್ಲಿ ಮುಖ್ಯಮಂತ್ರಿ ವಿವರಿಸಿದರು.
ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದ ದೊಡ್ಡ ಸಂಖ್ಯೆಯ ಜನರನ್ನು ಕ್ವಾರಂಟೈನ್ನಲ್ಲಿ ಇಡುವುದೇ ದೊಡ್ಡ ಸವಾಲಾಗಿದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ತಜ್ಞರು, 'ಸಂಪೂರ್ಣ ಶಟ್ ಡೌನ್ ಮಾಡುವುದೇ ಪರಿಹಾರ' ಎಂದು ಸಲಹೆ ನೀಡಿದರು.
'ರಾಜ್ಯದಲ್ಲಿ ಶೀಘ್ರ ಫೀವರ್ ಕ್ಲಿನಿಕ್ಗಳನ್ನು ಸ್ಥಾಪಿಸಿ, ಪ್ರಾಥಮಿಕ ಪರೀಕ್ಷೆ ನಡೆಸಬೇಕು' ಎಂದು ಸಲಹೆಯೂ ಸಭೆಯಲ್ಲಿ ವ್ಯಕ್ತವಾಯಿತು. ಈ ಸಲಹೆ ಒಪ್ಪಿಕೊಂಡ ಮುಖ್ಯಮಂತ್ರಿ, '30 ಫಿವರ್ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗುವುದು' ಎಂದು ಭರವಸೆ ನೀಡಿದರು.
'ಶೇ50 ರಷ್ಟು ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆ,ನೂರಕ್ಕೂ ಹೆಚ್ಚು ವೆಂಟಿಲೇಟರ್ಗಳು,ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1200 ಹಾಸಿಗೆಗಳ ಪ್ರತ್ಯೇಕ ಬ್ಲಾಕ್ ಗುರುತಿಸಿರುವಂತೆಯೇಖಾಸಗಿ ಆಸ್ಪತ್ರೆಯೊಂದನ್ನು ಗುರುತಿಸಲು ಸಹಕರಿಸುವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಮತ್ತು ವೈದ್ಯರು ಆಶ್ವಾಸನೆ ನೀಡಿದರು.
ಟೆಲಿಕನ್ಸಲ್ಟೇಶನ್ಗೆ ಅವಕಾಶ ನೀಡಲಾಗುವುದು. ಚಿಕಿತ್ಸೆ,ಸಲಹೆಗೆ ಹೊರಬರುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.