ಬೆಂಗಳೂರು: ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಕ್ಷೇತ್ರವಾರು ಅನುದಾನ ಹಂಚಿಕೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಕರ್ನಾಟಕ ರಾಜ್ಯ ಜಿಲ್ಲಾ ಪಂಚಾಯತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕೆರೆಹಳ್ಳಿ ನವೀನ್ ಆಗ್ರಹಿಸಿದರು.
ಈ ಸಂಬಂಧ ಅವರು, ಒಕ್ಕೂಟದ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜಿಲ್ಲಾ ಪಂಚಾಯತಿಗಳ ಸಬಲೀಕರಣ ಸಂಬಂಧಿಸಿದಂತೆ 2005ರಲ್ಲಿ ರಮೇಶ ಕುಮಾರ್ ಸಲ್ಲಿಸಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು, ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಕೇಂದ್ರದಲ್ಲಿ ಕಚೇರಿ ತೆರೆಯಬೇಕು, ಕನಿಷ್ಠ ₹100 ಕೋಟಿ ಅನುದಾನ ನೀಡಬೇಕು ಮುಂತಾದ ಬೇಡಿಕೆಗಳನ್ನು ಒಕ್ಕೂಟ ಮುಖ್ಯಮಂತ್ರಿ ಮುಂದಿಟ್ಟಿದೆ.
ಬೇಡಿಕೆಗಳ ಬಗ್ಗೆ ಸಕಾರಾತ್ಮಕ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು.