ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ: ಕೃಪಾಂಕಕ್ಕೆ ಸಿ.ಎಂ ಸಿಟ್ಟು

ಅಧಿಕಾರಿಗಳಿಗೆ ತರಾಟೆ
Published 17 ಮೇ 2024, 20:20 IST
Last Updated 17 ಮೇ 2024, 20:20 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಗಣನೀಯ ಕುಸಿತವಾಗಿರುವುದಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಪಾಂಕ ನೀಡಿ
ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿರುವ ಕ್ರಮವನ್ನು ಕಟು ಮಾತುಗಳಲ್ಲಿ ಪ್ರಶ್ನಿಸಿದ್ದಾರೆ.

ವಿವಿಧ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಜತೆ ವಿಧಾನಸೌಧದಲ್ಲಿ ಶುಕ್ರವಾರ ಅನೌಪಚಾರಿಕ ಸಭೆ ನಡೆಸಿದ ಅವರು, ಪ್ರಗತಿ ಪರಿಶೀಲನೆ ನಡೆಸಿದರು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ ಮತ್ತು ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿರುವ ಕ್ರಮದ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಈ ಆಕ್ಷೇಪಕ್ಕೆ ಏರಿದ ಧ್ವನಿ
ಯಲ್ಲಿಯೇ ದನಿಗೂಡಿಸಿದರು ಎಂದು ಮೂಲಗಳು ತಿಳಿಸಿವೆ.

‘ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡವರು ಯಾರು’ ಎಂದು ಮುಖ್ಯಮಂತ್ರಿಯವರು ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್ ಸಿಂಗ್ ಅವರನ್ನು ಪ್ರಶ್ನಿಸಿದರು. ಕೋವಿಡ್‌–19 ಸಂಕಷ್ಟದ ಅವಧಿಯಲ್ಲೂ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿದ್ದನ್ನು ಪ್ರಸ್ತಾಪಿಸಿ, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಅಧಿಕಾರಿಗಳು ಯತ್ನಿಸಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ ಅಧಿಕಾರಿಗಳನ್ನು ಗದರಿದರು ಎಂದು ಮೂಲಗಳು ಹೇಳಿವೆ.

‘ಕೋವಿಡ್‌–19 ಅವಧಿಯಲ್ಲಿ ಕೃಪಾಂಕ ನೀಡಿರುವುದನ್ನು ಒಪ್ಪಿಕೊಳ್ಳಬಹುದು. ಆದರೆ, ಈಗ 20 ಅಂಕಗಳನ್ನು ಕೃಪಾಂಕ ರೂಪದಲ್ಲಿ ನೀಡುವ ಅಗತ್ಯ ಏನಿತ್ತು’ ಎಂದು ಮುಖ್ಯಮಂತ್ರಿಯವರು ಸಭೆಯಲ್ಲಿದ್ದ ಅಧಿಕಾರಿಗಳನ್ನು ಪ್ರಶ್ನಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ, ‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ, ವೆಬ್‌ಕಾಸ್ಟಿಂಗ್‌ನಂತಹ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅವೆಲ್ಲವನ್ನೂ ಮಾಡಿದ ಬಳಿಕ ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿರುವುದು ಒಂದು ರೀತಿಯಲ್ಲಿ ಸಾಮೂಹಿಕ ನಕಲಿನಂತೆಯೇ ಅಲ್ಲವೆ? ಈ ರೀತಿಯ ಧೋರಣೆಯನ್ನು ಒಪ್ಪಿಕೊಳ್ಳಲಾಗದು’ ಎಂಬುದಾಗಿ ಕಟುವಾಗಿ ಹೇಳಿದ್ದಾರೆ.

‘10, 15 ಅಂಕ ಗಳಿಸಲಾಗದ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿ ತೇರ್ಗಡೆ ಮಾಡುವುದಾದರೆ ಮಂಡಳಿ ಪರೀಕ್ಷೆ ನಡೆಸುವ ಅಗತ್ಯವಾದರೂ ಏನಿದೆ? ಇಲಾಖೆಯ ಇಂತಹ ನಿರ್ಧಾರದಿಂದ ವರ್ಷವಿಡೀ ಶ್ರಮಪಟ್ಟು ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ’ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಮತ್ತು ತೃತೀಯ ಸ್ಥಾನ ಗಳಿಸಿರುವುದನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ‘ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗೆ ಅವಕಾಶವಿದೆ. ಆ ಕೆಲಸ ಆಗಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಕೃಪಾಂಕ ನೀಡುವುದನ್ನು ಸ್ಥಗಿತಗೊಳಿಸುವಂತೆಯೂ ನಿರ್ದೇಶನ ನೀಡಿದರು ಎಂಬ ಮಾಹಿತಿ ಲಭ್ಯವಾಗಿದೆ.

‘ಫಲಿತಾಂಶದಲ್ಲಿ ಸುಧಾರಣೆಗೆ ಪೂರಕವಾಗಿ ಶಾಲೆಗಳಲ್ಲಿ ಬೋಧನೆಯ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT