ಬೆಂಗಳೂರು: ‘ಬಿಡಿಎಗೆ ಭ್ರಷ್ಟಾಚಾರ ಕಳಂಕ ಸುತ್ತಿಕೊಂಡಿದ್ದು, ಆ ಹಣೆಪಟ್ಟಿಯಿಂದ ಹೊರಗೆ ತರಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾಕೀತು ಮಾಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು, ‘ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಕೆಲಸ ನಡೆಸಬೇಕು. ಬಿಡಿಎ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಡಿ–ನೋಟಿಫಿಕೇಶನ್ ಮಾಡುವಂತಿಲ್ಲ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಕೇವಲ ಅಧಿಸೂಚನೆ ಹೊರಡಿಸಿದರೆ ಸಾಲದು. ಅದಕ್ಕೆ ತಕ್ಕಂತೆ ಕಾಮಗಾರಿ ಗಡುವಿನ ಒಳಗಾಗಿ ಪೂರ್ಣಗೊಳಿಸಬೇಕು. ನಗರದಲ್ಲಿ ವಾಹನ ಸಂಚಾರ ದಟ್ಟಣೆ ವಿಪರೀತವಾಗಿದೆ. ಅದರ ಸುಧಾರಣೆಗೆ ಮೊದಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸ್ಥಳಗಳಲ್ಲಿ ರಸ್ತೆಗಳ ವಿಸ್ತರಣೆ ಮಾಡಬೇಕು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಸರಿಯಾದ ಪರಿಹಾರ ವಿತರಣೆ ಮಾಡಬೇಕು’ ಎಂದು ಸೂಚಿಸಿದರು.
‘ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸಬೇಕು. 73.40 ಕಿ.ಮೀ ಉದ್ದದ ಪೆರಿಫೆರಲ್ ವರ್ತುಲ ರಸ್ತೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತರಬೇಕು’ ಎಂದು ಸೂಚಿಸಿದರು.
‘ಬಿಡಿಎನಲ್ಲಿ ಭ್ರಷ್ಟಾಚಾರ ನಿಲ್ಲಬೇಕು. ಮುಂದೆ ಭ್ರಷ್ಟಾಚಾರ ನಡೆದರೆ ಅದನ್ನು ಸಹಿಕೊಂಡು ಕೂರುವುದಿಲ್ಲ. ನಗರದ ಅಭಿವೃದ್ಧಿಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುತ್ತೇನೆ. ಅಧಿಕಾರಿಗಳೂ ಅದಕ್ಕೆ ಬದ್ಧವಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು. ಬಿಡಿಎ ಆಯುಕ್ತ ಕುಮಾರ್ನಾಯಕ್ ಹಾಜರಿದ್ದರು.
ಬಿಡಿಎನಲ್ಲಿ ದೊಡ್ಡಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹೀಗಾಗಿ ನಗರದ ಅಭಿವೃದ್ಧಿಗೆ ಯಾವೆಲ್ಲ ಬದಲಾವಣೆಗಳನ್ನು ತರಬೇಕು ಎಂಬುದನ್ನು ಅಧಿಕಾರಿಗಳಿಗೆ ಸೂಚಿಸಿದ್ದೇನೆ.ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ
ಬೆಳೆದ ಫಸಲು ಕಾಪಾಡಿಕೊಳ್ಳಲು ಮುಂದಾಗಿದ್ದಕ್ಕೆ ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಲ್ಲ ಪ್ರಕರಣಗಳನ್ನೂ ವಾಪಸ್ ಪಡೆಯಬೇಕು.ಎಂ.ರಮೇಶ್ ರಾಮಗೊಂಡನಹಳ್ಳಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.