ಸಂಪತ್ರಾಜ್ ವಿರುದ್ಧ ಸುರ್ಜೇವಾಲಗೆ ಅಖಂಡ ದೂರು
ಬೆಂಗಳೂರು: ‘ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಘಟನೆಯಲ್ಲಿ ನನ್ನ ಮನೆಗೆ ಬೆಂಕಿ ಇಟ್ಟ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದೇನೆ. ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಹೈಕಮಾಂಡ್ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
ಕುಮಾರಕೃಪಾ ಅತಿಥಿಗೃಹದಲ್ಲಿ ಸುರ್ಜೇವಾಲ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ನನ್ನ ಅಹವಾಲು ಸಲ್ಲಿಸಿದ್ದೇನೆ. ಬಿಬಿಎಂಪಿ ಚುನಾವಣೆಯಲ್ಲಿ ಸಂಪತ್ರಾಜ್ ಅವರಿಗೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇನೆ’ ಎಂದರು.
‘ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಶಾಸಕ ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ಮುಖಂಡ. ಅವರೂ ಸೇರಿದಂತೆ ಪಕ್ಷದ ಎಲ್ಲ ನಾಯಕರಿಂದ ಸಹಕಾರ ಸಿಕ್ಕಿದೆ. ಎಲ್ಲರೂ ನನ್ನ ಪರವಾಗಿದ್ದಾರೆ ಎಂಬ ವಿಶ್ವಾಸ ಇದೆ’ ಎಂದೂ ಹೇಳಿದರು.
ರಾಮಲಿಂಗಾರೆಡ್ಡಿ ಮಾತನಾಡಿ, ‘ಅಖಂಡ ಶ್ರೀನಿವಾಸ ಮೂರ್ತಿ ವಿಚಾರವಾಗಿ ಸುರ್ಜೇವಾಲ ಜೊತೆ ಗುರುವಾರ ಮಾತನಾಡುತ್ತೇನೆ. ವಿಷಯವನ್ನು ಗಮನಕ್ಕೆ ತರುವುದು ನನ್ನ ಜವಾಬ್ದಾರಿ. ಸಂಪತ್ ರಾಜ್ ವಿರುದ್ಧ ಕ್ರಮಕೈಗೊಳ್ಳುವುದು ಅವರಿಗೆ ಬಿಟ್ಟಿದ್ದು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.