ಮತದಾರರಿಗೆ ₹ 6 ಸಾವಿರ ಆಮಿಷ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರಿಗೆ ತಲಾ ₹ 6 ಸಾವಿರ ನೀಡುವುದಾಗಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರನ್ನು ಒಳಗೊಂಡ ನಿಯೋಗ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಸೋಮವಾರ ಭೇಟಿ ನೀಡಿ ದೂರು ಸಲ್ಲಿಸಿದೆ.
‘ರಾಜ್ಯದ ಐದು ಕೋಟಿ ಮತದಾರರನ್ನು ₹ 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಸಂಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರೇರಣೆ ನೀಡಿದ್ದಾರೆ. ಹೀಗಾಗಿ, ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು’ ಎಂದು ದೂರಿನಲ್ಲಿ
ಒತ್ತಾಯಿಸಲಾಗಿದೆ.
ದೂರು ಸಲ್ಲಿಸಿದ ಬಳಿಕ ಮಾತನಾಡಿದ ಉಗ್ರಪ್ಪ, ‘ಪ್ರತಿ ಮತದಾರರಿಗೆ ತಲಾ ₹ 6ಸಾವಿರ ಕೊಡುತ್ತೇವೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಾವು ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ, ಪೊಲೀಸರು ಈಗಲೂ ಕಾನೂನು ಸಲಹೆ ಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಷಯ ಎಂದಿದ್ದಾರೆ. ಹೀಗಾಗಿ ದೂರು ನೀಡಿದ್ದೇವೆ’ ಎಂದರು.
‘ರಮೇಶ ಜಾರಕಿಹೊಳಿ, ನಡ್ಡಾ, ಕಟೀಲ್, ಬೊಮ್ಮಾಯಿ ಮೇಲೆ ಎಫ್ಐಆರ್ ದಾಖಲಿಸಲು ಆಯೋಗ ಸೂಚನೆ ಕೊಡಬೇಕು. ರಮೇಶ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಲು ನೋಟಿಸ್ ಕೊಡಬೇಕು. ನಡ್ಡಾ ಮತ್ತು ಕಟೀಲ್ ಅವರಿಗೂ ನೋಟಿಸ್ ನೀಡಿ, ಸಂಸದ ಸ್ಥಾನದಿಂದ ವಜಾ ಮಾಡಬೇಕು. ₹ 30 ಸಾವಿರ ಕೋಟಿ ಹಣದ ಹಿನ್ನೆಲೆ ಬಗ್ಗೆ ತನಿಖೆಗೆ ಆದಾಯ ತೆರಿಗೆ ಇಲಾಖೆಗೆ ಸೂಚಿಸಬೇಕು. ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂದು ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.