ಬೆಂಗಳೂರು: ‘ಕಸ ಸಂಗ್ರಹಕ್ಕೆ ಬಿಬಿಎಂಪಿ ಶುಲ್ಕವನ್ನು ಹೆಚ್ಚಿಸಿದೆ. ಇದೊಂದು ಅವೈಜ್ಞಾನಿಕ ಕ್ರಮ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಹೀಗಾಗಿ, ಇಂತಹ ಕ್ರಮಗಳಿಗೆ ಮುಂದಾಗಿದೆ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಎಂ. ನಾರಾಯಣಸ್ವಾಮಿ ಹೇಳಿದರು.
ಮನೆಗಳ ಕಸ ಸಂಗ್ರಹಕ್ಕೆ ಬಿಬಿಎಂಪಿ ಮಾಸಿಕ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ಕೆಲವು ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಆರ್ಥಿಕ ಪರಿಸ್ಥಿತಿ ಅಯೋಮಯವಾಗಿದೆ. ಇದಕ್ಕೆ ಮುಖ್ಯಮಂತ್ರಿಯವರೇ ನೇರ ಹೊಣೆ. ರಾಜ್ಯ ಸರ್ಕಾರ ತನ್ನ ಪಾಲಿನ ಜಿಎಸ್ಟಿ ಪರಿಹಾರ ಹಣವನ್ನು ಕೂಡಾ ಕೇಂದ್ರದಿಂದ ತರಲು ಸೋತಿದೆ’ ಎಂದರು.
‘ಕಸ ಸಂಗ್ರಹಕ್ಕೆ ಶುಲ್ಕ ಹೆಚ್ಚಿಸಿದ್ದರಿಂದ ಜನರಿಗೆ ತೊಂದರೆ ಆಗಲಿದೆ. ₹ 200ರಿಂದ ₹ 14 ಸಾವಿರವರೆಗೆ ಶುಲ್ಕ ಹೆಚ್ಚಿಸಲಾಗಿದೆ. ಕಸ ಸಂಗ್ರಹಕ್ಕೆ ಇಷ್ಡು ದೊಡ್ಡ ಪ್ರಮಾಣದ ಶುಲ್ಕ ಬೆಂಗಳೂರಿನಲ್ಲಿ ಮಾತ್ರವಿದೆ. ದೇಶದ ಇತರೆ ಯಾವುದೇ ನಗರಗಳಲ್ಲಿ ಈ ರೀತಿ ಶುಲ್ಕ ಇಲ್ಲ’ ಎಂದು ರಾಜ್ಯಸಭೆ ಕಾಂಗ್ರೆಸ್ ಸದಸ್ಯ ಜಿ.ಸಿ. ಚಂದ್ರಶೇಖರ್ ಹೇಳಿದರು.