ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ವಿರುದ್ಧ ನೀಡಿರುವ ಹೇಳಿಕೆ ಮುಂದಿಟ್ಟುಕೊಂಡು ಪ್ರತಿಭಟನೆಗೆ ಕಾಂಗ್ರೆಸ್ನವರು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಮುಖ್ಯ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
‘ಇದ್ದಿದ್ದು ಇದ್ದ ಹಾಗೆ ಹೇಳಿದರೆ, ಎದ್ದು ಬಂದು ಎದೆಗೆ ಒದ್ದಂತಾಗಿದೆ ಕಾಂಗ್ರೆಸ್ನವರ ವರ್ತನೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘2001 ರಲ್ಲಿ 1.60 ಲಕ್ಷ ಡಾಲರ್ ಮೌಲ್ಯದ ಮಾದಕ ದ್ರವ್ಯ ಸಹಿತ ಅಮೆರಿಕಾದಲ್ಲಿ ಸಿಕ್ಕಿ ಬಿದ್ದಿದ್ದರು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಧ್ಯ ಪ್ರವೇಶಿಸಿ ರಾಹುಲ್ ಅವರನ್ನು ಬಿಡಿಸಿದ್ದರು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದರು. ಅದನ್ನು ಉಲ್ಲೇಖಿಸಿ ಕಟೀಲ್ ಹೇಳಿಕೆ ನೀಡಿದ್ದಾರೆ’ ಎಂದರು.
ಸ್ವಾಮಿ ಅವರು ಈ ಆರೋಪ ಮಾಡಿದಾಗ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಯಾವುದೇ ಹಿರಿಯ ನಾಯಕರೂ ಅದನ್ನು ತಳ್ಳಿ ಹಾಕಲಿಲ್ಲ. ಇದು ಮೌನಂ ಸಮ್ಮತಿ ಲಕ್ಷಣಂ ಅಲ್ಲವೇ ಎಂದು ಪ್ರಶ್ನಿಸಿದರು.
ಆರ್ಎಸ್ಎಸ್ ಕುರಿತು ಎಚ್.ಡಿ.ಕುಮಾರಸ್ವಾಮಿ ನೀಡಿರುವ ಅವಹೇಳನಕಾರಿ ಹೇಳಿಕೆ ಹಿಂದಕ್ಕೆ ಪಡೆದು ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಒತ್ತಾಯಿಸಿದರು.