ಬೆಂಗಳೂರು: ನ್ಯಾಯಮೂರ್ತಿಗಳು ಮತ್ತು ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ವರ್ತನೆ ತೋರಿದ ಆರೋಪ ಮೇಲೆ ವಕೀಲ ಕೆ.ಎಸ್.ಅನಿಲ್ ಅವರನ್ನು ಇದೇ 10ರವರೆಗೆ ಪೊಲೀಸ್ ವಶದಲ್ಲಿ ಇರಿಸಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್ 2019ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಇದೇ 2ರಂದು ಈ ಆದೇಶ ಹೊರಡಿಸಿದೆ.
‘ಆರೋಪಿ ನ್ಯಾಯಾಂಗ ನಿಂದನೆ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸದೆ ಬೇರೆ ದಾರಿ ಕಾಣುತ್ತಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
‘ವಕೀಲಿಕೆ ನಡೆಸುತ್ತಿರುವ ಆರೋಪಿ ನಿರಂತರವಾಗಿ ನ್ಯಾಯಾಂಗದ ಘನತೆಗೆ ಕುಂದು ತರುತ್ತಿದ್ದು ವೃಥಾ ಆರೋಪಗಳನ್ನು ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಂಗದ ಬಗೆಗಿನ ವರ್ಚಸ್ಸಿಗೆ ಧಕ್ಕೆ ಆಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದೇ 10ರಂದು ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶಿಸಲಾಗಿದೆ.