ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ತಕ್ಷಣ ನೇಮಕಾತಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರವೂ ಮುಂದುವರಿದಿದೆ. ಮಲ್ಲೇಶ್ವರದ ಪದವಿಪೂರ್ವ ಶಿಕ್ಷಣ ಮಂಡಳಿ ಕಚೇರಿ ಮುಂಭಾಗ ನೂರಾರು ಅಭ್ಯರ್ಥಿಗಳು ಧರಣಿ ಮುಂದುವರಿಸಿದ್ದಾರೆ.
ಸಮಸ್ಯೆ ಪರಿಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದರು. ಆದರೆ, ಭರವಸೆಗೆ ಮಣಿಯದ ಅಭ್ಯರ್ಥಿಗಳು ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಪಟ್ಟು ಹಿಡಿದಿದ್ದಾರೆ.
‘ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಒಂದು ವರ್ಷದೊಳಗೆ ಆದೇಶ ಹೊರಡಿಸಿ, ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಒಂದು ವರ್ಷ ಕಳೆಯಲು ಎರಡು ದಿನಗಳಷ್ಟೇ ಉಳಿದಿವೆ. ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರು ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದಾರೆ. ನೇಮಕಾತಿ ಆದೇಶ ಹೊರಡಿಸುವವರೆಗೂ ಧರಣಿ ಕೈಬಿಡುವುದಿಲ್ಲ’ ಎಂದು ಪ್ರತಿಭಟನನಿರತರು ಹೇಳಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಬೆಂಬಲ: ಮಂಗಳವಾರ ಮಧ್ಯಾಹ್ನ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಮುಖ್ಯಮಂತ್ರಿ ಜತೆ ಮಾತನಾಡಿ, ತಕ್ಷಣ ನೇಮಕಾತಿ ಆದೇಶ ಹೊರಡಿಸುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.