ನಗರದಲ್ಲಿ ಮೊದಲ ಪ್ರಕರಣ ವರದಿಯಾದ ಬಳಿಕ (ಮಾ.8) ಪ್ರತಿ ರೋಗಿಯ ಪ್ರಯಾಣದ ಇತಿಹಾಸ ಕಲೆ ಹಾಕಿ ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚಿ, ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿತ್ತು. ಅವರಿಗೆ ಕೋವಿಡ್ ಪರೀಕ್ಷೆ ನಡೆಸಿ, ಸೋಂಕು ತಗುಲಿಲ್ಲ ಎಂಬುದು ಖಚಿತವಾದ ಬಳಿಕವಷ್ಟೇ ಮನೆಗೆ ತೆರಳಲು ಅವಕಾಶ ನೀಡಲಾಗುತ್ತಿತ್ತು. ಇದರಿಂದಾಗಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು. ಆದರೆ, ಲಾಕ್ ಡೌನ್ ಸಡಿಲಿಸಿದ ಬೆನ್ನಲ್ಲಿಯೇ ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ, ಕ್ವಾರಂಟೈನ್ ಹಾಗೂ ಕೋವಿಡ್ ಪರೀಕ್ಷೆಯ ನಿಯಮಗಳನ್ನು ಸಡಿಲಿಸಲಾಗಿದೆ. ಇದು ಕೂಡ ನಗರದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲು ಕಾರಣ.