ಬೆಂಗಳೂರು: ‘ಸರ್ಕಾರಿ ನೌಕರರ ವಿರುದ್ಧ ದಾಖಲಾಗುವ ಭ್ರಷ್ಟಾಚಾರ ಆರೋಪದ ಖಾಸಗಿ ದೂರುಗಳ ಸಂಬಂಧ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ಕಲಂ 17 (ಎ)ರ ಪ್ರಕಾರ ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ತನಿಖೆ ನಡೆಸುವಂತಿಲ್ಲ’ ಎಂದು ಹೈಕೋರ್ಟ್ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ.
ಖಾಸಗಿ ದೂರು ಪರಿಗಣಿಸಿ ತನಿಖೆಗೆ ಆದೇಶಿಸಿದ್ದ ಸೆಷನ್ಸ್ ನ್ಯಾಯಾಲಯ ಆದೇಶದ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಯಾಗಿದ್ದ ವಿ. ಅಶೋಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಕುರಿತಂತೆ ನಿರ್ದೇಶಿಸಿದೆ.
‘ಕಲಂ 17 (ಎ) ರ ಅಡಿ ಸರ್ಕಾರಿ ನೌಕರರಿಗೆ ನೀಡಲಾಗಿರುವ ರಕ್ಷಣಾ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿಫಲವಾದಲ್ಲಿ ಕಾನೂನು ದುರ್ಬಳಕೆ ಮಾಡಿದಂತಾಗುತ್ತದೆ. ಆದರೂ, ಈ ಅವಕಾಶವನ್ನು ತಪ್ಪಿತಸ್ಥರು ರಕ್ಷಣೆಗಾಗಿ ಬಳಕೆ ಮಾಡುತ್ತಾರೆ ಎಂಬುದನ್ನು ಪರಿಗಣಿಸಲು ಆಗದು. ಇದು ಮುಗ್ಧರಿಗೆ ನೀಡುವ ರಕ್ಷಣೆಯಾಗಿದ್ದು, ಇದನ್ನು ಪಾಲಿಸುವುದು ಕಡ್ಡಾಯ’ ಎಂದು ನ್ಯಾಯಪೀಠ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.