ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ನ್ಯಾಯಾಲಯಕ್ಕೆ ಪುನರ್‌ ಪರಿಶೀಲನಾ ಅರ್ಜಿ

ಕೆಪಿಎಸ್‌ಸಿ: 2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದ
Last Updated 17 ಮಾರ್ಚ್ 2020, 21:19 IST
ಅಕ್ಷರ ಗಾತ್ರ

ಬೆಂಗಳೂರು: ‘2011ನೇ ಸಾಲಿನ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ನಡೆದ ನೇಮಕಾತಿ ವಿಷಯದಲ್ಲಿ ಕೋರ್ಟ್‌ಗೆ ರಾಜ್ಯ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಲಿದೆ’ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.

ವಿಧಾನಪರಿಷತ್‌ನಲ್ಲಿ ಮಂಗಳವಾರ ಕಾಂಗ್ರೆಸ್ಸಿನ ಪಿ.ಆರ್‌. ರಮೇಶ, ಜೆಡಿಎಸ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ, ಶ್ರೀಕಂಠಯ್ಯ ಮತ್ತಿತರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಸಾಲಿನ ನೇಮಕಾತಿಯನ್ನು ಹೈಕೋರ್ಟ್‌ ರದ್ದುಪಡಿಸಿದ್ದು, ಅದೇ ಆದೇಶವನ್ನು ಸುಪ್ರೀಂ ಕೋರ್ಟ್‌ ಕೂಡ ಎತ್ತಿಹಿಡಿದೆ. ಹುದ್ದೆಗಳಿಗೆ ನೇಮಕಗೊಂಡ ಬಳಿಕ ಪಟ್ಟಿ ರದ್ದುಗೊಂಡಿದ್ದರಿಂದ ಕೆಲಸದಿಂದ ವಂಚಿತರಾದವರ ಬಗ್ಗೆ ಸರ್ಕಾರಕ್ಕೂ ಅನುಕಂಪವಿದೆ’ ಎಂದರು.

ವಿಷಯ ಪ್ರಸ್ತಾಪಿಸಿದ ರಮೇಶ್‌, ‘ನೇಮಕಾತಿ ವಿಷಯದಲ್ಲಿ ಸತ್ಯವನ್ನು ಮುಚ್ಚಿಟ್ಟು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ಅಲ್ಲದೆ, ಕರ್ನಾಟಕ ಲೋಕ ಸೇವಾ ಆಯೋಗ ತನ್ನ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ವರದಿ ಮಂಡಿಸಿದರೂ, ಸಂವಿಧಾನದ ವಿಧಿ 323 (2) ಅನ್ವಯ ಸದಸ್ಯರಿಗೆ ಚರ್ಚೆಗೆ ಅವಕಾಶ ಸಿಕ್ಕಿಲ್ಲ’ ಎಂದರು.

‘ಯಾರೊ ಮಾಡಿದ ತಪ್ಪಿಗೆ 362 ಅಭ್ಯರ್ಥಿಗಳು ಬಲಿಯಾಗಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆ ಆದವರಿಗೂ ಅನ್ಯಾಯವಾಗಿದೆ. ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಕೆಪಿಎಸ್‌ಸಿ ಸದಸ್ಯರು, ಅಧಿಕಾರಿಗಳ ಮೇಲೆ ಈವರೆಗೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ‌, ಈ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಬೇಕು’ ಎಂದು ಹೊರಟ್ಟಿ ವಾದಿಸಿದರು.

‘ಸಿಐಡಿ ನೀಡಿದ್ದ ಮಧ್ಯಂತರ ವರದಿ ಆಧರಿಸಿ ಅಧಿಸೂಚನೆಯನ್ನು ವಾಪಸು‍ ಪಡೆದಿತ್ತು. ಈ ರೀತಿ ಮಧ್ಯಂತರ ವರದಿ ಮೇಲೆ ನೇಮಕಾತಿ ಅಧಿಸೂಚನೆ ವಾಪಸು ಪಡೆಯಲು ಕಾನೂನಿನಲ್ಲಿ ಅವಕಾಶ ಇದೆಯೇ’ ಎಂದು ಮರಿತಿಬ್ಬೇಗೌಡ ಪ್ರಶ್ನಿಸಿದರು.’

‘ನೇಮಕಾತಿ ವೇಳೆ ಕೆಪಿಎಸ್‌ಸಿ ಸದಸ್ಯರಾಗಿದ್ದವರು ನಿವೃತ್ತರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಪ್ರಶ್ನೆ ಈಗ ಉದ್ಭವಿಸುವುದಿಲ್ಲ’ ಎಂದು ಮಾಧುಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT