ಬೆಂಗಳೂರು: ‘ಕೋವಿಡ್ ಲಸಿಕೆ ನೀಡುವ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು’ ಎಂದು ಮನವಿ ಮಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಈ ವಿಷಯದಲ್ಲಿ ವಿರೋಧ ಪಕ್ಷಗಳು ಸರ್ಕಾರಕ್ಕೆ ರಚನಾತ್ಮಕ, ಮೌಲ್ಯಯುತ ಸಲಹೆಗಳನ್ನು ನೀಡಬೇಕು’ ಎಂದು ಮನವಿ ಮಾಡಿದರು.
‘ಚಿತ್ರಸಂತೆ’ ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರತಿಯೊಂದರಲ್ಲಿಯೂ ರಾಜಕೀಯ ಹುಡುಕುವುದು ಕೆಲವರಿಗೆ ಅಂಟಿರುವ ಜಾಡ್ಯ. ಅದಕ್ಕೇನು ಮಾಡಲು ಸಾಧ್ಯ? ಸಹಕಾರ ಕೊಡಿ ಎಂದಷ್ಟೇ ಸರ್ಕಾರ ಮನವಿ ಮಾಡಲು ಸಾಧ್ಯ’ ಎಂದರು.
‘ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಭಾರತ್ ಬಯೋಟೆಕ್ಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಮೊದಲ ಹಂತದಲ್ಲಿ ಕೋವಿಡ್ ವಾರಿಯರ್ಸ್ಗೆ ಹಾಗೂ ಈ ಮಾರಿಯ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸುತ್ತಿರುವವರಿಗೆ ಲಸಿಕೆ ನೀಡಲಾಗುವುದು’ ಎಂದು ಅವರು ಹೇಳಿದರು.
‘ಭಾರತ ಅತಿ ಹೆಚ್ಚು ಜನಸಂಖ್ಯೆಯುಳ್ಳ ದೇಶವಾಗಿದ್ದು, ಲಸಿಕೆ ನೀಡಲು ಎಷ್ಟು ಕಂಪನಿಗಳು ಮುಂದೆ ಬಂದರೂ ಸಾಕಾಗುವುದಿಲ್ಲ. ಹೀಗಾಗಿ ಭಾರತ್ ಬಯೋಟೆಕ್ಗೆ ಅನುಮತಿ ನೀಡಿರುವ ಕ್ರಮ ಉತ್ತಮ ಹೆಜ್ಜೆ’ ಎಂದು ಸಮರ್ಥಿಸಿದರು.
‘ತ್ವರಿತವಾಗಿ ಎಲ್ಲರಿಗೂ ಲಸಿಕೆ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡು ಭರದಿಂದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದ್ಯತೆಯ ಅನುಸಾರವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಆಗುತ್ತದೆ’ ಎಂದೂ ಹೇಳಿದರು.