ಬೆಂಗಳೂರು: ಕೊಳೆಗೇರಿ ಮತ್ತು ಜನದಟ್ಟಣೆ ಪ್ರದೇಶದಲ್ಲಿ ವಾಸಿಸುವ ಜನರಿಗೆ ಕೋವಿಡ್ ಲಸಿಕೆ ಕೊಡಿಸಲು ಆದ್ಯತೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕೋವಿಡ್ ವಿಷಯದ ಕುರಿತ ಅರ್ಜಿಗಳನ್ನು ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.
‘ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ಲಸಿಕೆ ತೆಗೆದುಕೊಳ್ಳಲು ಮನವೊಲಿಸಲು ರಾಜ್ಯ ಸರ್ಕಾರ ವಿಶೇಷ ಪ್ರಯತ್ನ ಮಾಡಬೇಕಾಗುತ್ತದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.
ಒಳಾಂಗಣ ಮತ್ತು ಹೊರಾಂಗಣದಲ್ಲಿ ನಡೆಯುವ ರಾಜಕೀಯ, ಧಾರ್ಮಿಕ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ಎಷ್ಟು ಜನ ಸೇರಬೇಕು ಎಂಬ ನಿಯಮಗಳನ್ನು ಒಳಗೊಂಡ ಮಾ.24ರ ಹೊರಡಿಸಿರುವ ಅಧಿಸೂಚನೆ ಅನುಷ್ಠಾನ ಸಂಬಂಧಿಸಿದಂತೆ ವಿವರ ಸಲ್ಲಿಸುವಂತೆ ಪೀಠ ತಿಳಿಸಿತು.