ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ರೂಪಿಸಿರುವ ನಿಯಮ ಉಲ್ಲಂಘಿಸಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೂರ್ವ ವಿಭಾಗದ ಪೊಲೀಸರು 1058 ಪ್ರಕರಣ ದಾಖಲಿಸಿಕೊಂಡಿದ್ದಾರೆ. 26 ವಾಣಿಜ್ಯ ಮಳಿಗೆಗಳನ್ನೂ ಬಂದ್ ಮಾಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಅಷ್ಟಾದರೂ ಹಲವರು, ನಿಯಮ ಉಲ್ಲಂಘಿಸುತ್ತಿರುವುದು ಹೆಚ್ಚಾಗಿತ್ತು. ಇದರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
’48 ಗಂಟೆಗಳ ಕಾರ್ಯಾಚರಣೆಯಲ್ಲಿ 1058 ಪ್ರಕರಣ ದಾಖಲಿಸಿಕೊಂಡು, ತಪ್ಪಿತಸ್ಥರಿಂದ ₹ 2.64 ಲಕ್ಷ ದಂಡ ಸಂಗ್ರಹಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ವಾಣಿಜ್ಯ ಮಳಿಗೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಮಾರ್ಗಸೂಚಿಗಳನ್ನು ಪಾಲಿಸದ 26 ವಾಣಿಜ್ಯ ಮಳಿಗೆಗಳನ್ನು ಮುಚ್ಚಿಸಿ, ನೋಟಿಸ್ ನೀಡಲಾಗಿದೆ’ ಎಂದೂ ತಿಳಿಸಿದರು.