ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್ ಬೆಟ್ಟಿಂಗ್‌ಗೆ ಕಾನ್‌ಸ್ಟೆಬಲ್‌ಗಳೇ ರೂವಾರಿ!

ಅಮಾನತು ಆದೇಶ ಹೊರಡಿಸಿದ ಡಿಸಿಪಿಗಳು
Last Updated 9 ಮಾರ್ಚ್ 2021, 20:41 IST
ಅಕ್ಷರ ಗಾತ್ರ

ಬೆಂಗಳೂರು: ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಕಾನ್‌ಸ್ಟೆಬಲ್‌ಗಳಿಬ್ಬರು ಭಾಗಿಯಾಗಿ ಆರೋಪಿಗಳನ್ನು ರಕ್ಷಿಸುತ್ತಿದ್ದ ಸಂಗತಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.

‘ಠಾಣೆ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕೆಲ ದಿನಗಳ ಹಿಂದಷ್ಟೇ ದಾಳಿ ಮಾಡಿ ಇಬ್ಬರು ಕಾನ್‌ಸ್ಟೆಬಲ್‌ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿತ್ತು. ನಗದು ಹಾಗೂ ಮೊಬೈಲ್ ಸಹ ಜಪ್ತಿ ಮಾಡಲಾಗಿತ್ತು. ಆರೋಪಿಗಳನ್ನು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಉಪ್ಪಾರಪೇಟೆ ಠಾಣೆ ಕಾನ್‌ಸ್ಟೆಬಲ್ ಶಿವಕುಮಾರ್ ಹಾಗೂ ಹುಳಿಮಾವು ಸಂಚಾರ ಠಾಣೆ ಕಾನ್‌ಸ್ಟೆಬಲ್‌ ಮಣಿಕಂಠ ಬಂಧಿತರು. ಒಂದೇ ಬ್ಯಾಚ್‌ನಲ್ಲಿ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿದ್ದ ಅವರು, ಉಳಿದ ನಾಲ್ವರು ಆರೋಪಿಗಳ ಬೆಟ್ಟಿಂಗ್ ದಂಧೆಗೆ ನೆರವಾಗುತ್ತಿದ್ದರು. ದಾಳಿ ಬಗ್ಗೆ ಆರೋಪಿಗಳಿಗೆ ಮುಂಚಿತವಾಗಿ ಮಾಹಿತಿ ನೀಡುತ್ತಿದ್ದರು. ಅದಕ್ಕಾಗಿ ಹಣವನ್ನೂ ಪಡೆಯುತ್ತಿದ್ದರೆಂಬ ಮಾಹಿತಿ ಇದೆ’ ಎಂದೂ ಮೂಲಗಳು ಹೇಳಿವೆ.

‘ಕಾನ್‌ಸ್ಟೆಬಲ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು, ಪ್ರಾಥಮಿಕ ವರದಿ ಸಮೇತ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ ಅವರಿಗೆ ವರದಿ ಸಲ್ಲಿಸಲಾಗಿದೆ. ಅಮಾನತು ಬಗ್ಗೆ ಆಯಾ ವಿಭಾಗದ ಡಿಸಿಪಿ ಅವರೇ ಕ್ರಮ ಕೈಗೊಳ್ಳಲಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ಕಾನ್‌ಸ್ಟೆಬಲ್‌ಗಳು ಅಮಾನತು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದರು ಎನ್ನಲಾದ ಕಾನ್‌ಸ್ಟೆಬಲ್‌ಗಳಾದ ಶಿವಕುಮಾರ್ ಹಾಗೂ ಮಣಿಕಂಠ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

‘ಉಪ್ಪಾರಪೇಟೆ ಕಾನ್‌ಸ್ಟೆಬಲ್ ಶಿವಕುಮಾರ್ ಕೃತ್ಯದಲ್ಲಿ ಭಾಗಿಯಾಗಿದ್ದ ಬಗ್ಗೆ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ವರದಿ ನೀಡಿದ್ದರು. ಅದನ್ನು ಪರಿಶೀಲಿಸಿ ಅಮಾನತು ಆದೇಶ ಹೊರಡಿಸಲಾಗಿದೆ’ ಎಂದು ಸಂಜೀವ್ ಪಾಟೀಲ ಹೇಳಿದರು.

ಹುಳಿಮಾವು ಸಂಚಾರ ಠಾಣೆ ಕಾನ್‌ಸ್ಟೆಬಲ್ ಮಣಿಕಂಠ್ ಅವರನ್ನು ಸಂಚಾರ (ಪೂರ್ವ ವಿಭಾಗ) ಡಿಸಿಪಿ ನಾರಾಯಣ ಅಮಾನತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT