ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕದ ಡೊಂಕು ನೀವೇಕೆ ತಿದ್ದುವಿರಿ?: ಎಚ್‌ಡಿಕೆಗೆ ಡಿಕೆಶಿ ಪ್ರಶ್ನೆ

ಎಚ್‌.ಡಿ. ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ್‌ ಪ್ರಶ್ನೆ
Published 10 ಮೇ 2024, 15:39 IST
Last Updated 10 ಮೇ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ? ಮೊದಲು ನಿಮ್ಮ ಮನೆಯಲ್ಲಿರುವ ಡೊಂಕನ್ನು ತಿದ್ದಿಕೊಳ್ಳಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಹೇಳಿದರು.

ಕುಮಾರಸ್ವಾಮಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವ ಕುರಿತು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ಎಂಬ ಬಸವಣ್ಣನವರ ವಚನವನ್ನು ಅವರು ಆರ್ಥ ಮಾಡಿಕೊಳ್ಳಬೇಕು’ ಎಂದರು.

‘ಬೇರೆಯವರ ಸಂಗತಿ ಕುಮಾರಸ್ವಾಮಿ ಅವರಿಗೆ ಏಕೆ ಬೇಕು? ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಏಕೆ ಮಾತನಾಡುತ್ತೀರಾ? ನಾವೆಲ್ಲರೂ ಬಸವಣ್ಣನವರ ವಚನವನ್ನು ಪಾಲನೆ ಮಾಡಿಕೊಂಡು ಮುನ್ನಡೆಯೋಣ. ರಾಜ್ಯಪಾಲರ ಬಳಿ ಹೋಗಿರುವ ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದರು.

ಪೊಲೀಸರು ಉತ್ತರ ನೀಡುತ್ತಾರೆ: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಯಾವುದೇ ಸಂತ್ರಸ್ತೆ ದೂರು ನೀಡಿಲ್ಲ ಎಂಬ ರಾಷ್ಟ್ರೀಯ ಮಹಿಳಾ ಆಯೋಗದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್‌, ‘ಈಗಲಾದರೂ ರಾಷ್ಟ್ರೀಯ ಮಹಿಳಾ ಆಯೋಗ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದೆ ಎಂಬುದೇ ಸಮಾಧಾನದ ಸಂಗತಿ. ಆಯೋಗದ ಹೇಳಿಕೆ ಕುರಿತು ಉತ್ತರ ನೀಡುವುದು ನನ್ನ ಕೆಲಸವಲ್ಲ. ಪೊಲೀಸ್‌ ಇಲಾಖೆ ಮತ್ತು ತನಿಖಾ ತಂಡದ ಅಧಿಕಾರಿಗಳು ಆಯೋಗಕ್ಕೆ ಉತ್ತರ ನೀಡುತ್ತಾರೆ’ ಎಂದರು.

‘ಸಂತ್ರಸ್ತೆಯರಿಗೆ ಪ್ರಭಾವಿ ರಾಜಕಾರಣಿಗಳಿಂದ ಬೆದರಿಕೆ, ಅಪಾಯ ಇದೆ. ಭಯದ ಕಾರಣದಿಂದ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಎದುರು ಹಾಜರಾಗಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಭಾರತೀಯರ ಬಣ್ಣದ ಕುರಿತು ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೋಡಾ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ‘ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಸಾಧಿಸಿದೆ. ಕಾಂಗ್ರೆಸ್‌ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಯಾರಿಗೂ ಅನುಮಾನ ಬೇಡ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT