ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಕ್ಷ ಸಂಘಟನೆಗಾಗಿ 'ಕಾಂಗ್ರೆಸ್ ಕುಟುಂಬ' ಕಾರ್ಯಕ್ರಮ: ಡಿ.ಕೆ. ಶಿವಕುಮಾರ್

Published 27 ಮೇ 2024, 9:54 IST
Last Updated 27 ಮೇ 2024, 9:54 IST
ಅಕ್ಷರ ಗಾತ್ರ

ಬೆಂಗಳೂರು:'ಮತಗಟ್ಟೆ ಹಂತದಿಂದಲೇ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ ನಡೆದ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದು, “ಕಾಂಗ್ರೆಸ್ ಕುಟುಂಬ” ಎಂಬ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಮತಗಟ್ಟೆ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು. ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ ಅವರು ಈ ಜವಾಬ್ದಾರಿ ತೆಗೆದುಕೊಂಡು ಈ ಕಾಂಗ್ರೆಸ್ ಕುಟುಂಬವನ್ನು ಬೆಳೆಸಲೇಬೇಕು. ಇದಕ್ಕೆ ನೀವು ಸಜ್ಜಾಗಬೇಕು' ಎಂದರು.

ತಿಂಗಳಿಗೊಮ್ಮೆ ಕಾರ್ಯಕರ್ತರ ಭೇಟಿಯಾಗುವ ಮುಖ್ಯಮಂತ್ರಿ:

'ನಾನು ಹಾಗೂ ಮುಖ್ಯಮಂತ್ರಿಯವರು ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ ಕೆಲಸ ಮಾಡಲಿದ್ದೇವೆ. ಇದನ್ನು ಸರಿಯಾದ ವ್ಯವಸ್ಥೆ ಮೂಲಕ ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಕೇವಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಇನ್ನು ಮಂತ್ರಿಗಳು ವಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು' ಎಂದು ತಿಳಿಸಿದರು.

'ಎಷ್ಟೋ ಬಾರಿ ಕಾರ್ಯಕರ್ತರು ನಮ್ಮನ್ನು ಭೇಟಿ ಮಾಡಲು ದೂರದ ಊರುಗಳಿಂದ ಬರುತ್ತಾರೆ. ಆದರೆ ನಾವು ಅವರನ್ನು ಭೇಟಿ ಮಾಡಲು ಆಗುವುದಿಲ್ಲ. ಪ್ರಮುಖರನ್ನೇ ಮೊದಲು ಕರೆದು ಮಾತನಾಡಿಸುತ್ತೇವೆ. ಇದರಿಂದ ನಮಗೂ ಮುಜುಗರವಾಗುತ್ತದೆ. ನಮ್ಮನ್ನು ವಿಧಾನಸೌಧದಲ್ಲಿ ಕೂರಿಸಿದವರ ಜತೆ ನಮಗೆ ಮಾತನಾಡಲು ಆಗುವುದಿಲ್ಲ. ಈ ಅನುಭವ ನನಗೂ ಆಗಿದೆ. ಹೀಗಾಗಿ ಈ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ' ಎಂದರು.

ಈ ಸರ್ಕಾರ ನಾಲ್ಕು ವರ್ಷದ ಸರ್ಕಾರ ಅಲ್ಲ. 10 ವರ್ಷದ ಸರ್ಕಾರ ಇದಕ್ಕಾಗಿ ನಾವು ಈಗೀನಿಂದಲೂ ತಯಾರಿ ನಡೆಸಬೇಕು. ನಾನು ಈಗಾಗಲೇ ನಮ್ಮ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕೃಷ್ಣ ಭೈರೇಗೌಡ ಅವರ ಜತೆ ಚರ್ಚೆ ಮಾಡಿದ್ದೇನೆ. ನಾವು ನಮ್ಮ ದೇವಾಲಯವಾಗಿರುವ ಕಾಂಗ್ರೆಸ್ ಕಚೇರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಮುಂದಿನ ಒಂದು ವರ್ಷದಲ್ಲಿ ಅಡಿಪಾಯ ಹಾಕುತ್ತೇವೆ. ಇನ್ನು ರೇಸ್ ಕೋರ್ಸ್ ರಸ್ತೆಯ ಕಚೇರಿಯ ಕಟ್ಟಡ ನೆಲಸಮಗೊಳಿಸಿ ಹೊಸದಾಗಿ ನಿರ್ಮಾಣ ಮಾಡುತ್ತೇವೆ. ಎಲ್ಲಾ ಜಿಲ್ಲೆಗಳಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಇದರ ಹೊಣೆ ಹೊರಬೇಕು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿವೆ ಎಂದು ಹೇಳಿದರು.

ಎಲ್ಲರೂ ಒಟ್ಟಾಗಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ ಎದುರಿಸಬೇಕು. ನಮ್ಮ ಪಕ್ಷ ಆರಕ್ಕೆ ಆರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಆಮೂಲಕ ಮೇಲ್ಮನೆಯಲ್ಲಿ ನಮಗೆ ಬಹುಮತ ಸಿಗಬೇಕು. ಆಗ ಮಾತ್ರ ಬಿಲ್ ಗಳು ಪಾಸಾಗುತ್ತವೆ.” ಎಂದರು.

ನೆಹರೂ ಅವರು ಕಾಂಗ್ರೆಸ್ ಪಕ್ಷದ ಶಕ್ತಿ:

ನೆಹರೂ ಅವರ ಹೆಸರೇ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರಿಗೆ ಒಂದು ಸ್ಫೂರ್ತಿ. ಈ ದೇಶದಲ್ಲಿ ಸಂವಿಧಾನದ ಅಡಿಯಲ್ಲಿ ನಾವು ಕೆಲಸ ಮಾಡುತ್ತಿದ್ದು ಇದಕ್ಕೆ ಭದ್ರ ಅಡಿಪಾಯ ಹಾಕಿದ್ದು ನೆಹರೂ ಅವರು. ಈ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು.

ಬಿಜೆಪಿ ನಾಯಕರು ಇತಿಹಾಸ ತಿರುಚಲು, ಅವರ ಹೆಸರನ್ನು ಇತಿಹಾಸ ಪುಟಗಳಿಂದ ತೆಗೆಯಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಅವರು ಇನ್ನು 2-3 ಜನ್ಮ ಎತ್ತಿ ಬಂದರೂ ನೆಹರೂ ಅವರ ಸಾಧನೆ ತೆಗೆದುಹಾಕಲು ಸಾಧ್ಯವಿಲ್ಲ ಎಂದರು.

ಸ್ಥಳೀಯ ಸಂಸ್ಥೆಗಳ ವಿಚಾರವಾಗಿ ಇತ್ತೀಚೆಗೆ ನಾನು ಮಾತನಾಡಿದ್ದೆ. ನೆಹರೂ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿದ್ದರೂ ಅಲಹಬಾದ್ ಮುನ್ಸಿಪಲ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ಸ್ವಾತಂತ್ರ್ಯ ಹೋರಾಟ ಮಾಡಿಕೊಂಡು ಜೈಲು ವಾಸ ಅನುಭವಿಸಿ ನಂತರ ಪ್ರಧಾನಮಂತ್ರಿಯಾದರು. ಪ್ರತಿ ರಾಜ್ಯದಲ್ಲೂ ಅವರದೇ ಆದ ಸಾಕ್ಷಿ ಗುಡ್ಡೆಗಳನ್ನು ಬಿಟ್ಟಿದ್ದಾರೆ ಎಂದು ಹೇಳಿದರು.

ನೆಹರೂ ಅವರು ಕಟ್ಟಿ ಬೆಳೆಸಿದ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಮಾರುತ್ತಾ ಬಂದಿದೆ. ಬೆಂಗಳೂರಿನಲ್ಲಿ ಎಚ್ಎಂಟಿ, ಹೆಚ್ಎಎಲ್, ಐಐಟಿ, ಬಿಹೆಚ್ಇಎಲ್, ಇಸ್ರೋ ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿದ್ದಾರೆ. ಅಂದಿನ ಕಾಲದಲ್ಲಿ ಉದ್ಯೋಗ ಸೃಷ್ಟಿಸಿ ಬಡತನ ನಿವಾರಣೆಗೆ ಎಲ್ಲಾ ವರ್ಗದ ಜನರಿಗೆ ಶಕ್ತಿ ತುಂಬಲು ಈ ಸಾರ್ವಜನಿಕ ಉದ್ದಿಮೆ ಆರಂಭಿಸಿದರು. ಅವರು ಮಾಡಿದ ಆಸ್ತಿಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದರು.

ನಮ್ಮ ಸರ್ಕಾರ ಕೂಡ ಅವರ ಮಾತಿನಂತೆ ಮಹಿಳೆಯರಿಗೆ ಶಕ್ತಿ ತುಂಬಬೇಕು ಎಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆ ಮೂಲಕ ಹಣ್ಣಿಗೆ ಆರ್ಥಿಕ ಶಕ್ತಿ ತುಂಬಿದ್ದೇವೆ ಎಂದು ಹೇಳಿದರು.

ಈ ದೇಶದಲ್ಲಿ ಅವರ ಕೈಗಾರಿಕಾ ನೀತಿ, ವಿದೇಶಾಂಗ ನೀತಿ, ಅಭಿವೃದ್ಧಿ ನೀತಿಯಿಂದ ಅವರನ್ನು ಇಡೀ ವಿಶ್ವ ಬಹಳ ಗೌರವದಿಂದ ಕಾಣುತ್ತಿತ್ತು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT