ಬೆಂಗಳೂರು: ‘ಲೋಕಸಭೆ ಚುನಾವಣೆಯ ಸಮಯದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ ಹಾಗೂ ಚುನಾವಣಾ ಅಕ್ರಮದಲ್ಲಿ ತೊಡಗುವುದಿಲ್ಲ’ ಎಂದು ಮುಚ್ಚಳಿಕೆ ಬರೆದು ಕೊಡುವಂತೆ ಸೂಚಿಸಿ ಮಲ್ಲೇಶ್ವರದ ಬಿಜೆಪಿ ಕಚೇರಿಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ವಿರುದ್ಧ ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರು ಜಾರಿ ಮಾಡಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ನೋಟಿಸ್ ಪ್ರಶ್ನಿಸಿ ಲೋಕೇಶ ಅಂಬೇಕಲ್ಲು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರು ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದ್ದಾರೆ.
‘ಈಗಾಗಲೇ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಹೀಗಾಗಿ, ಅರ್ಜಿದಾರರ ವಿರುದ್ಧದ ನೋಟಿಸ್ ಮಾನ್ಯತೆ ಕಳೆದುಕೊಂಡಿದೆ. ಆದ್ದರಿಂದ, ಅದನ್ನು ರದ್ದುಪಡಿಸಲಾಗುತ್ತಿದೆ’ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ. ವಿನೋದ್ ಕುಮಾರ್ ವಾದ ಮಂಡಿಸಿದ್ದರು.