ಬೆಂಗಳೂರು:‘ಪರಿಶಿಷ್ಟ ಜಾತಿಗೆ ಈಗಿರುವ ಮೀಸಲಾತಿಯನ್ನು ಶೇ 15ರಿಂದ ಶೇ 20ಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿ ಸೋಮವಾರ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಮೀಸಲಾತಿಯನ್ನು ನಿಗದಿಪಡಿಸುವ ಬದಲಿಗೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ನಿಗದಿಪಡಿಸುವ ನಿಟ್ಟಿನಲ್ಲಿ ಆದೇಶ ನೀಡಬೇಕು ಎಂದು ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಒತ್ತಾಯಿಸಿದರು.
ದಲಿತ ಹಕ್ಕುಗಳ ಕಾವಲು ಸಮಿತಿ ವತಿಯಿಂದ ಸೋಮವಾರ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗಕ್ಕೆ ಮನವಿ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ಶೇ 17ರಷ್ಟು ಮತ್ತು ಶೇ 7ರಷ್ಟು ಮೀಸಲಾತಿಯನ್ನು ನಿಗದಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಿಟ್ಟಿರುವ ಪ್ರಸ್ತಾವವನ್ನು ವಿರೋಧಿಸಿದರು.
ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, ಶೇ 50ರ ಮೀಸಲಾತಿ ಮಿತಿಯನ್ನು ತೆಗೆದುಹಾಕಿ, ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ನಿಗದಿಪಡಿಸಬೇಕು, ಇದರ ಬಗ್ಗೆ ಸಂವಿಧಾನ ತಿದ್ದುಪಡಿ ಆಗಬೇಕು ಎಂದು ಒತ್ತಾಯಿಸಿದರು.