ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ಆಹಾರ ದರ ಇಳಿಸಿ: ರಾಜ್ಯ ರೈತ ಸಂಘ, ಹಸಿರುಸೇನೆ ಕಾರ್ಯಕರ್ತರ ಆಗ್ರಹ

Last Updated 8 ನವೆಂಬರ್ 2022, 20:25 IST
ಅಕ್ಷರ ಗಾತ್ರ

ಯಲಹಂಕ: ಹಾಲಿನ ದರ ಏರಿಸಿ, ಪಶು ಆಹಾರ ದರ ಇಳಿಸಬೇಕೆಂದು ಒತ್ತಾಯಿಸಿ, ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಕಾರ್ಯಕರ್ತರು ಹಾಗೂ ರೈತರು, ರಾಜಾನುಕುಂಟೆಯ ಪಶು ಆಹಾರ ಉತ್ಪಾದನಾ ಘಟಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ ತುಮಕೂರು, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕೆಎಂಎಫ್ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರಾಜ್ಯ ರೈತಸಂಘದ ರಾಜ್ಯಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಪಶು ಆಹಾರದ ದರವನ್ನು ಏಕಾಏಕಿ ಒಂದು ಟನ್‌ಗೆ ₹3500ಕ್ಕೆ ಏರಿಸಲಾಗಿದೆ. ಜತೆಗೆ, ಹಾಲಿನ ದರ ಏರಿಕೆ ಮಾಡದೆ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದರು.

ಹಾಲು ಒಕ್ಕೂಟವು ಆಡಳಿತ ನಿರ್ವಹಣೆಗಾಗಿಯೇ ಅನಗತ್ಯವಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ, ರೈತರಿಗೆ ಮಾತ್ರ ನ್ಯಾಯಯುತ ದರ ನೀಡದೆ, ಗ್ರಾಹಕರಿಂದಲೂ ದುಬಾರಿ ಹಣ ವಸೂಲಿ ಮಾಡುತ್ತಿದೆ. ಗೋ ಶಾಲೆ ಗಳನ್ನು ಆರಂಭಿಸಿದರೆ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಆದರೆ ರೈತರು ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆಯದೆ ಹೈನುಗಾರಿಕೆ ಮಾಡಿದರೂ ಹಾಲಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಮಾತನಾಡಿ, ‘ಕಚ್ಚಾ ವಸ್ತುಗಳ ಬೆಲೆ ಹೆಚ್ಚಾದರೆ ಉತ್ಪಾದನಾ ವಸ್ತುಗಳ ಬೆಲೆಯೂ ಹೆಚ್ಚಾಗುತ್ತದೆ. ಅದರಂತೆ ಹಾಲಿನ ಬೆಲೆಯೂ ಹೆಚ್ಚಾಗಬೇಕು. ಪಶು ಆಹಾರದ ಮಾರುಕಟ್ಟೆಗಳ ಮೇಲೆ ಸರ್ಕಾರದ ನಿಯಂತ್ರಣವಿರಬೇಕು’ ಎಂದು ಒತ್ತಾಯಿಸಿದರು.

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಪ್ರತಿಕ್ರಿಯಿಸಿ, ‘ಕಚ್ಚಾ ವಸ್ತುಗಳ ಬೆಲೆ ಶೇ 20ರಿಂದ 25ರಷ್ಟು ಹೆಚ್ಚಾಗಿರುವುದರಿಂದ ಪಶು ಆಹಾರದ ಬೆಲೆಯನ್ನು ಅನಿವಾರ್ಯವಾಗಿ ಏರಿಸಲಾಗಿದೆ. ಗ್ರಾಹಕರ ಹಾಲಿನ ದರ ಹೆಚ್ಚಿಸುವುದರ ಜೊತೆಗೆ ಪಶು ಆಹಾರದ ದರವನ್ನು ಇಳಿಸುವ ಬಗ್ಗೆ ನವೆಂಬರ್ 15ರೊಳಗಾಗಿ ಅಧ್ಯಕ್ಷರು ಹಾಗೂ ಸರ್ಕಾರದ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT