ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಿಮಾನ ಹಾರಾಟದಲ್ಲಿ ವ್ಯತ್ಯಯವಾದ ಕಾರಣ ಸಾಕಷ್ಟು ಜನ ದಟ್ಟಣೆ ಉಂಟಾಯಿತು.
ಏಷ್ಯಾದ ಅತಿದೊಡ್ಡ ಏರ್ ಶೋ ‘ಏರೋ ಇಂಡಿಯಾ’ ಇಲ್ಲಿಗೆ ಸಮೀಪದ ಯಲಹಂಕ ವಾಯುನೆಲೆಯಲ್ಲಿ ಇದೇ 13ರಿಂದ 17ರ ವರೆಗೂ ನಡೆಯಲಿದೆ. ಸುರಕ್ಷತೆಯ ದೃಷ್ಟಿಯಿಂದ ವಾಣಿಜ್ಯ ವಿಮಾನಗಳ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು ನಿರ್ಗಮನ ದ್ವಾರಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು.
ಈ ಕುರಿತು ಟ್ವಿಟರ್ ಮೂಲಕ ಪ್ರಯಾಣಿಕರು ವಿಡಿಯೊ, ಫೋಟೊಗಳನ್ನು ಹಂಚಿಕೊಂಡಿದ್ದು, ವಿಮಾನಯಾನ ಸಚಿವಾಲಯವೂ ತ್ವರಿತವಾಗಿ ಸಮಸ್ಯೆ ಬಗೆಹರಿಸಿ, ಸೂಕ್ತವಾದ ಮುನ್ನೆಚ್ಚರಿಕಾ ಯೋಜನೆಗಳನ್ನು ಕೈಗೊಳ್ಳಬೇಕು. ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಿಗೆ ಅನುಕೂಲ ವಾತಾವರಣ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.