ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜ ಅರಸು ಟ್ರಕ್ ಟರ್ಮಿನಲ್‌: ₹47 ಕೋಟಿ ಅಕ್ರಮ– ಸಿಐಡಿ ತನಿಖೆ

Published 18 ಮಾರ್ಚ್ 2024, 23:11 IST
Last Updated 18 ಮಾರ್ಚ್ 2024, 23:11 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.10 ಕೋಟಿ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಕಚೇರಿಗೆ ಸೋಮವಾರ ಭೇಟಿ ನೀಡಿ 600ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

2021ರಿಂದ 2023ರ ನಡುವೆ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಾಲಿ‌ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಸಿ.ಎನ್. ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್‌ಐಆರ್ ದಾಖಲಾಗಿತ್ತು. ಇದೇ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಅಕ್ರಮ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳ ತಂಡ, ದೂರುದಾರ ಸಿ.ಎನ್. ಶಿವಪ್ರಕಾಶ್ ಅವರಿಂದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ, ಅಧಿಕಾರಿಗಳು ಶಾಂತಿನಗರದಲ್ಲಿರುವ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ ಕಚೇರಿಗೆ ಸೋಮವಾರ ಭೇಟಿ ನೀಡಿದರು.

‘ತುಂಡು ಗುತ್ತಿಗೆ ಹೆಸರಿನಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇದೊಂದು ಆರ್ಥಿಕ ಅಪರಾಧ. ಹೀಗಾಗಿ, ಸೂಕ್ತ ದಾಖಲೆಗಳನ್ನು ಸುಪರ್ದಿಗೆ ಪಡೆದು ಪರಿಶೀಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಆರೋಪಿಗಳ ವಿಚಾರಣೆಯೂ ನಡೆಯುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಬಿಜೆಪಿ ಸರ್ಕಾರದ ಅಕ್ರಮಕ್ಕೆ ಪುರಾವೆ’

‘ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ₹47.10 ಕೋಟಿ ಅಕ್ರಮ ನಡೆದಿದೆ. ಇದು, ಬಿಜೆಪಿ ಸರ್ಕಾರದ ಅಕ್ರಮಗಳಿಗೆ ‍ಪುರಾವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ಪ್ರಕರಣದ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ನಿರ್ದೇಶಕ ಮಂಡಳಿ ಸಭೆಯ ನಡಾವಳಿ ತಿರುಚಿ ಅಕ್ರಮ ಎಸಗಲಾಗಿದೆ. ಈ ಅಕ್ರಮವನ್ನು ಪತ್ತೆ ಮಾಡಿರುವ ಈಗಿನ ವ್ಯವಸ್ಥಾಪಕ ನಿರ್ದೇಶಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸಿಐಡಿ ತನಿಖೆ ನಡೆಯುತ್ತಿದೆ’ ಎಂದರು.

‘ಹಿಂದಿನ ಅಧ್ಯಕ್ಷ, ಎಂ.ಡಿ ಹಾಗೂ ಇತರರು ಅಕ್ರಮದಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಸಿಐಡಿ ತನಿಖೆಯಿಂದ ನಿಜಾಂಶ ತಿಳಿಯಬೇಕಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT