ಬೆಂಗಳೂರು: ನಗರದ ಕೋವಿಡ್ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿನ ಸೌಲಭ್ಯಗಳ ಮೇಲ್ವಿಚಾರಣೆಗಾಗಿ ರಚಿಸಿರುವ ರಾಜ್ಯ ಮಟ್ಟದ ತಜ್ಞರ ಸಮಿತಿ ಸಲ್ಲಿಸಿರುವ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸಮಿತಿಯನ್ನುಪುನರ್ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವರದಿ ಪರಿಶೀಲನೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠ, ‘ಸಮಿತಿ ತನ್ನ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿಲ್ಲ’ ಎಂದು ಅಭಿಪ್ರಾಯಪಟ್ಟಿತು.
‘ಸಮಿತಿ ಸದಸ್ಯ ಕಾರ್ಯದರ್ಶಿ ನಾಲ್ಕು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಉಳಿದ ಸದಸ್ಯರು ಯಾವುದೇ ಆಸ್ಪತ್ರೆಗೆ ಭೇಟಿ ನೀಡಿಲ್ಲ.ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಲಭ್ಯತೆ ಮತ್ತು ಜಿಲ್ಲಾ ಸಮಿತಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಗಳ ಬಗ್ಗೆ ಅಸ್ಪಷ್ಟ ಹೇಳಿಕೆಗಳಿವೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.