ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತಗಟ್ಟೆ ಅಧಿಕಾರಿಗಳಿಗೆ ಬುಧವಾರ ನಡೆದ 2ನೇ ಹಂತದ ತರಬೇತಿಯನ್ನು ಪರಿಶೀಲಿಸಲು ಶಿವಾಜಿನಗರ, ಗಾಂಧಿನಗರ, ಶಾಂತಿನಗರದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ವಿವಿ ಪ್ಯಾಟ್, ಕಂಟ್ರೋಲ್ ಯುನಿಟ್ ಹಾಗೂ ಬ್ಯಾಲೆಟ್ ಯೂನಿಟ್ ಹೇಗೆ ಕಾರ್ಯನಿರ್ವಹಿಸಲಿದೆ? ಯಾವ ರೀತಿ ಸಂಪರ್ಕ ನೀಡಬೇಕು ಎಂಬುದನ್ನು ಸರಿಯಾಗಿ ನೋಡಿಕೋಳ್ಳಬೇಕು ಎಂದು ಸಲಹೆ ನೀಡಿದರು.
ಮತದಾನದ ಕುರಿತು ಹೆಚ್ಚು ಮಾಹಿತಿಗಾಗಿ ಮತಗಟ್ಟೆ ಕೈಪಿಡಿಯನ್ನು ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳ ಕೈಪಿಡಿಯು ಭಾರತ ಚುನಾವಣಾ ಅಯೋಗ ಹಾಗೂ ಕರ್ನಾಟಕ ಚುನಾವಣಾ ಆಯೋಗದ ವೆಬ್ಸೈಟ್ನಲ್ಲೂ ಲಭ್ಯವಿದ್ದು, ಅಲ್ಲಿಯೂ ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಪಡೆದುಕೊಳ್ಳಬಹುದೆಂದು ತಿಳಿಸಿದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಸಹಾಯಕ ಚುನಾವಣಾಧಿಕಾರಿಗಳಾದ ಚಿದಾನಂದ ಎಸ್. ವಠಾರೆ, ಕಮಲಾ ಬಾಯಿ, ಮಮತಾ ಕುಮಾರಿ, ಮತದರಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.