ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಕುರಿತು ಸತ್ಯಶೋಧನಾ ವರದಿ ಬಿಡುಗಡೆ ಮಾಡಿರುವ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದೆ.
ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೌನ್ಸಿಲ್ನ ರಾಷ್ಟ್ರೀಯ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ, ‘ಆಡಳಿತ ವ್ಯವಸ್ಥೆ ವೈಫಲ್ಯ ಘಟನೆಗೆ ಪ್ರಮುಖ ಕಾರಣ. ಬಂಧಿತರ ಆಮೇಲಿನ ಯುಎಪಿಎ ಅಡಿ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
‘ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ವ್ಯಕ್ತಿಯ ಹಿನ್ನೆಲೆ ಬಹಿರಂಗಪಡಿಸಬೇಕು. ಅದೇ ರೀತಿ, ಗೋಲಿಬಾರ್ನಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ಒದಗಿಸಬೇಕು. ಅಮಾಯಕರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.
ಕೌನ್ಸಿಲ್ನ ರಾಜ್ಯ ಘಟಕದ ಅಧ್ಯಕ್ಷ ಮೌಲಾನಾ ಅತೀಕುರ್ ರಹಮಾನ್ಅ ಶ್ರಫಿ, ‘ಹಿಂದಿನಿಂದಲೂ ಕೋಮು ಸಾಮರಸ್ಯಕ್ಕೆ ಹೆಸರಾಗಿದ್ದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪ್ರದೇಶಗಳಲ್ಲಿ ರಾಜಕೀಯ ಲಾಭಕ್ಕಾಗಿ ಕೋಮು ಧ್ರುವೀಕರಣಗೊಳಿಸಲು ಪ್ರಯತ್ನಿಸಲಾಗಿದೆ’ ಎಂದರು.
‘ಅಮಾಯಕರನ್ನು ಬಂಧಿಸಲಾಗಿದೆ. ಘಟನೆಯನ್ನು ಪೂರ್ಣ ಪ್ರಮಾಣದಲ್ಲಿ ಪರಿಶೀಲನೆ ನಡೆಸಿದಾಗ ಆಡಳಿತ ವೈಫಲ್ಯವೇ ಕಾರಣವಾಗಿದೆ. ಹೀಗಾಗಿ, ನ್ಯಾಯಾಂಗ ತನಿಖೆ ನಡೆಯಬೇಕು’ ಎಂದೂ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.