ಹತ್ತು ವರ್ಷಗಳಿಂದ ಇಎಸ್ಐ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ. ಬಸವರಾಜು ಅವರಿಗೆ ಎರಡು ವಾರಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮನೆ ಆರೈಕೆಗೆ ಒಳಪಟ್ಟಿದ್ದ ಅವರು, ಸ್ವಯಂಚಿಕಿತ್ಸೆ ಮಾಡಿಕೊಳ್ಳುತ್ತಿದ್ದರು. ಆದರೆ, ಐದು ದಿನಗಳ ಹಿಂದೆ ರಕ್ತದಲ್ಲಿನ ಆಮ್ಲಜನಕ ಪ್ರಮಾಣ ಕಡಿಮೆಯಾಗಿ, ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಚಿಕಿತ್ಸೆಗೆ ಅವರನ್ನು ಇಎಸ್ಐ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆ ಹೊಂದಿರುವ ಹಾಸಿಗೆ ಲಭ್ಯವಿಲ್ಲದ ಕಾರಣ ಬೇರೆ ಆಸ್ಪತ್ರೆಗೆ ತೆರಳುವಂತೆ ವೈದ್ಯರು ಸೂಚಿಸಿದ್ದರು.