ಬೆಂಗಳೂರು: ಲಘು ಉದ್ಯೋಗ ಭಾರತಿ ಕರ್ನಾಟಕದ ಸಹಯೋಗದಲ್ಲಿ ಐಎಂಎಸ್ ಪ್ರತಿಷ್ಠಾನವು ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ‘ಮನೆ ಬಾಗಿಲಿಗೆ ಆರೋಗ್ಯ ಸೇವೆ’ ಪ್ರಾರಂಭಿಸಿದೆ.
‘ಕ್ಲಿನಿಕ್ ಆನ್ ವೀಲ್ಸ್’ ಎಂಬ ಸರಣಿಯಡಿ ಪ್ರತಿಷ್ಠಾನವು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಗರದಲ್ಲಿ ಶನಿವಾರ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
‘ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗಿ, ಚಿಕೂನ್ಗುನ್ಯಾದಂತಹ ಕಾಯಿಲೆ ಹೆಚ್ಚಳಕ್ಕೆ ಜಾಗೃತಿ ಕೊರತೆ ಪ್ರಮುಖ ಕಾರಣ. ಆದ್ದರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಇಡಿ ಪರದೆ ಇರಿಸಿ, ಪ್ರಾದೇಶಿಕ ಭಾಷೆಗಳಲ್ಲಿ ಆರೋಗ್ಯ ಸಂಬಂಧಿ ಜಾಗೃತಿ ವಿಡಿಯೊಗಳನ್ನು ಪ್ರಸಾರ ಮಾಡಲಾಗುತ್ತದೆ. ಮೊಬೈಲ್ ಕ್ಲಿನಿಕ್ಗಳ ನೆರವಿನಿಂದ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಕೈಗೊಳ್ಳಲು ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ಪ್ರತಿ ರೋಗಿಯ ಆರೋಗ್ಯದ ಪ್ರೊಫೈಲ್ ಸಿದ್ಧಪಡಿಸಲಾಗುತ್ತದೆ’ ಎಂದು ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸ್ವಪ್ನಾ ಸಿಂಗ್ ತಿಳಿಸಿದರು.
‘ಅಧಿಕ ರಕ್ತದೊತ್ತಡ, ಮಧುಮೇಹ ಸೇರಿ ವಿವಿಧ ಜೀವನಶೈಲಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೋಗಿಗಳಿಗೆ ಉಚಿತ ಔಷಧ ಒದಗಿಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಹಾರ ಪದ್ಧತಿಯ ಬಗ್ಗೆಯೂ ತಿಳಿಸಿಕೊಡಲಾಗುತ್ತದೆ’ ಎಂದು ಹೇಳಿದರು.
‘ಕ್ಲಿನಿಕ್ ಆನ್ ವೀಲ್ಸ್ ಅಡಿ ವೈದ್ಯಕೀಯ ಸೇವೆಗಳ ಜತೆಗೆ ಸಾಮಾಜಿಕ ಕಳಕಳಿಯನ್ನೂ ಮೆರೆಯಲಾಗುತ್ತದೆ. ಗ್ರಾಮೀಣ ಭಾಗದ ಜನರು ಆರೋಗ್ಯವಾಗಿದ್ದಲ್ಲಿ ಶಕ್ತಿಯುತ ರಾಷ್ಟ್ರ ನಿರ್ಮಾಣ ಸಾಧ್ಯ. ಆದ್ದರಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ ಪ್ರಾರಂಭಿಸಲಾಗಿದೆ. ಡಿಜಿಟಲ್ ತಂತ್ರಜ್ಞಾನದ ನೆರವಿನಿಂದ ಆರೋಗ್ಯದ ಬಗ್ಗೆ ಶಿಕ್ಷಣವನ್ನೂ ನೀಡಲಾಗುತ್ತದೆ’ ಎಂದು ವಿವರಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.