‘ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಶಿಕ್ಷಕ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಅತ್ಯಂತ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದರೂ ಗೌರವದಿಂದ ಬದುಕು ಸಾಗಿಸುತ್ತಿದ್ದ ಈ ವರ್ಗಕ್ಕೆ ಅನಿಶ್ಚಿತತೆ ಆವರಿಸಿದೆ. 14 ತಿಂಗಳುಗಳಿಂದ ಸಂಬಳ ಇಲ್ಲದೆ, ಬೇರೆ ಉದ್ಯೋಗವೂ ಇಲ್ಲದೆ ಚಿಂತಾಜನಕ ಸ್ಥಿತಿಯಲ್ಲಿ ದಿನದೂಡುತ್ತಿದ್ದಾರೆ. ಕೆಲವರು ತರಕಾರಿ, ಹಣ್ಣು ಮಾರುವ ಮತ್ತು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುದ ದಯನೀಯ ಪರಿಸ್ಥಿತಿ ಬಂದಿದೆ. ಕೆಲವರು ಆರ್ಥಿಕ ಹೊರೆ ತಾಳಲಾಗದೆ, ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದಿವೆ’ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.