ಬೆಂಗಳೂರು: ಇದೇ 19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಭಾವಿಯಾಗಿ ನಡೆದ ಅಣಕು ಪರೀಕ್ಷೆ ಪರಿಶೀಲಿಸಲು ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶನಿವಾರ ಭೇಟಿ ನೀಡಿದರು.
ಮಲ್ಲೇಶ್ವರದ ಸರ್ಕಾರಿ ಪ್ರೌಢಶಾಲೆ, ಎಂಇಎ ಪ್ರೌಢಶಾಲೆ, ಸದಾಶಿವ ನಗರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ, ಪೀಣ್ಯ ದಾಸರಹಳ್ಳಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಅಣಕು ಪರೀಕ್ಷೆಗಳನ್ನು ಹಾಗೂಪರೀಕ್ಷಾ ಪೂರ್ವಭಾವಿ ಸಿದ್ಧತೆಗಳನ್ನು ಅವರು ಪರಿಶೀಲಿಸಿದರು.
ಬಳಿಕ ಮಾತನಾಡಿದ ಸಚಿವರು,‘ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದಕಳೆದ ಬಾರಿಗಿಂತ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ. ಪರೀಕ್ಷಾ ಕರ್ತವ್ಯಕ್ಕೂ ಈ ಬಾರಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದರು.
‘ಒಂದು ಕೊಠಡಿಯಲ್ಲಿ 12ಕ್ಕಿಂತ ಹೆಚ್ಚು ಮಂದಿ ಇರಬಾರದು. ಕೊಠಡಿಯ ಹೊರಗೆ ಮತ್ತು ಒಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತದೆ. ಕೆಲವೆಡೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಪ್ರವೇಶ ದ್ವಾರ,ಸ್ಯಾನಿಟೈಸ್ ವ್ಯವಸ್ಥೆ, ದೇಹದ ಉಷ್ಣಾಂಶ ತಪಾಸಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಸ್ಕ್ ವಿತರಣೆಗೂ ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.
490 ಪರೀಕ್ಷಾ ಕೇಂದ್ರಗಳು ಸಜ್ಜು: ‘ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಿಬಿಎಂಪಿ ಶಾಲೆಗಳು ಹಾಗೂ ಖಾಸಗಿ ಶಾಲೆಗಳು ಸೇರಿದಂತೆ ಒಟ್ಟು 490 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪಾಲಿಕೆ ವತಿಯಿಂದ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಆಶಾ ಕಾರ್ಯಕರ್ತರು, ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ’ ಎಂದು ಬಿಬಿಎಂಪಿಯ ಶಿಕ್ಷಣ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.